ಬೆಂಗಳೂರು : ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅನಕ್ಷರಸ್ಥರು, ವಿಧವೆಯರು ಅರ್ಜಿ ಸಲ್ಲಿಸಿದ ವೇಳೆ ಅಧಿಕಾರಿಗಳು ನೆರವಾಗಲು ಅಗತ್ಯ ಪೂರ್ವಭಾವಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ಕಲಬುರಗಿ ಜಿಲ್ಲೆ ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಜವಾನ ಆಗಿದ್ದ ರಾಜಾ ಪಟೇಲ್ ನಿಧನದ ನಂತರ ಆತನ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಸರ್ಕಾರ ವಿಳಂಬ ಮಾಡಿದ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಎಂಟು ವಾರದಲ್ಲಿ ಮೃತ ನೌಕರನ ಪುತ್ರ ಮಹಿಬೂಬ್ ಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವಂತೆ ಸೂಚಿಸಿದೆ.
ಅನುಕಂಪದ ನೇಮಕಾತಿ ಅರ್ಜಿಗಳ ನಿರ್ವಹಣೆ ವಿಚಾರವಾಗಿ ಎಲ್ಲ ಇಲಾಖೆಗಳು ಏಕರೂಪದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರೂಪಿಸಬೇಕು. ಜತೆಗೆ, ಅರ್ಜಿಗಳ ಲೋಪವಾಗದಂತೆ ನಿರ್ವಹಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದು ಪೀಠ ಹೇಳಿದೆ.
ಅನುಕಂಪದ ನೇಮಕಾತಿ ಅರ್ಜಿಗಳನ್ನು 30 ದಿನಗಳ ಒಳಗೆ ಲಿಖಿತವಾಗಿ ಸ್ವೀಕರಿಸಬೇಕು. ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿಪಡಿಸಬೇಕು. ಅರ್ಜಿ ಸಲ್ಲಿಕೆಗೆ ಮಾರ್ಗದರ್ಶನ ನೀಡಬೇಕು. ಅರ್ಜಿ ಸಲ್ಲಿಕೆಯಾದ 90 ದಿನಗಳ ಒಳಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಅರ್ಜಿಗಳನ್ನು ತಿರಸ್ಕರಿಸಿದ ಸಂದರ್ಭದಲ್ಲಿ ಸಮಂಜಸ ಕಾರಣ ನೀಡಬೇಕು ಈ ಕುರಿತ ಪ್ರಕ್ರಿಯೆಗೆ ಏಕರೂಪದ ಪ್ರಮಾಣಿತ ಕಾರ್ಯಾಚರಣೆ ಜಾರಿಗೆ ತರಬೇಕು ಎಂದು ಮಾರ್ಗಸೂಚಿ ಪ್ರಕಟಿಸಿ ಪಾಲಿಸುವಂತೆ ಸೂಚಿಸಲಾಗಿದೆ.