ವಿಜಯನಗರ : ಈ ಹಿಂದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ನಡೆದಿದ್ದವು. ಅದರ ಬೆಲೆ ಇದೀಗ ವಿಜಯನಗರದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕನೊಬ್ಬ ಬಾಳೆಹಣ್ಣಿನ ಆಸೆ ತೋರಿಸಿ ಶೌಚಾಲಯ ಸ್ವಚ್ಛಗೊಳಿಸಿರುವ ಘಟನೆ ವರದಿಯಾಗಿದೆ.
ಹೌದು ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿರುವ ಆಘಾತಕಾರಿ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಉಮೇಶ್ ವಿರುದ್ಧ ಗ್ರಾಮಸ್ಥರು ಈಗ ರೊಚ್ಚಿಗೆದ್ದಿದ್ದಾರೆ.
ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಉಮೇಶ್ ಅವರು ಇಬ್ಬರು ಪುಟ್ಟ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣಿನ ಆಸೆ ತೋರಿಸಿ, ಅವರಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ. ಈ ದೃಶ್ಯವನ್ನು ಗಮನಿಸಿದ ಸ್ಥಳೀಯ ಯುವಕರು ಮತ್ತು ಸಾರ್ವಜನಿಕರು ತಕ್ಷಣವೇ ಶಿಕ್ಷಕನನ್ನು ಪ್ರಶ್ನಿಸಿದ್ದಾರೆ.
ಯುವಕರು ತಪ್ಪು ಒಪ್ಪಿಕೊಳ್ಳುವಂತೆ ಶಿಕ್ಷಕನಿಗೆ ಒತ್ತಾಯಿಸಿದಾಗ, ಶಿಕ್ಷಕ ಉಮೇಶ್ ಉದ್ಧಟತನ ಮೆರೆದಿದ್ದಾರೆ. ನನ್ನನ್ನು ಪ್ರಶ್ನಿಸಲು ನೀವ್ಯಾರು? ನಿಮ್ಮ ಮೇಲೆ ಪೊಲೀಸ್ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.ಈ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಹಗರಿಬೊಮ್ಮನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗೆ (BEO) ಅಧಿಕೃತ ದೂರು ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ‘ಮಕ್ಕಳಿಗೆ ವಿದ್ಯೆ ಕಲಿಸಬೇಕಾದ ಶಿಕ್ಷಕರೇ ಈ ರೀತಿ ವರ್ತಿಸಿದರೆ ಮಕ್ಕಳ ಭವಿಷ್ಯವೇನು? ಇಂತಹ ಶಿಕ್ಷಕರು ನಮ್ಮೂರಿಗೆ ಬೇಡ’ ಎಂದು ಘೋಷಣೆ ಕೂಗಿದರು. ಕೂಡಲೇ ಮುಖ್ಯ ಶಿಕ್ಷಕ ಉಮೇಶ್ನನ್ನು ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದರು.








