ಚಿತ್ರದುರ್ಗ: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದರು.

ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ ಎಂದರು.

ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು.

ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಹಾಗಾದ್ರೆ ಮೋದಿ ಯಾರ ಪರ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದರು.

ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ ಎಂದು ಪ್ರಶ್ನಿಸಿದರು.

ಹೀಗೆ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತದೆ ಎಂದರು.

Share.
Exit mobile version