ಬೆಂಗಳೂರು: ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಜಾರಿಗೆ ತರುತ್ತಿರುವ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಈ ನೀತಿ ಜಾರಿಗೆ ತರಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳು ಸೂಚಿಸಿದರು.
ಅವರು ಇಂದು ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಕುರಿತು ಇಂದು ಪ್ರೊ. ಅಶೋಕ ಶೆಟ್ಟರ್ ನೇತೃತ್ವದ ಟಾಸ್ಕ್ ಫೋರ್ಸ್ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಕುರಿತಂತೆ ಟಾಸ್ಕ್ ಫೋರ್ಸ್ ಅಧ್ಯಕ್ಷರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಒಟ್ಟಾರೆಯಾಗಿ ಈ ವಲಯವನ್ನು ಪರಿಗಣಿಸಿದಾಗ, ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಆದ್ದರಿಂದ ಈ ಕ್ಷೇತ್ರದ ಅಭಿವೃದ್ಧಿಗೆ ವ್ಯವಸ್ಥಿತ ಚೌಕಟ್ಟು ನೀಡುವ ಅಗತ್ಯವಿದೆ. ಜೊತೆಗೆ ನೀತಿಯು ಅತ್ಯಂತ ಸರಳವಾಗಿದ್ದು, ಜನಸಾಮಾನ್ಯರಿಗೂ ಅರ್ಥವಾಗುವಂತಿರಬೇಕು ಎಂದು ಅಭಿಪ್ರಾಯಪಟ್ಟರು.
ಸಂಶೋಧನೆ ಮತ್ತು ಅಭಿವೃದ್ಧಿಯ ಫಲಶ್ರುತಿ ಮಾನವನ ದೈನಂದಿನ ಜೀವನದಲ್ಲಿ ಬಳಕೆಯಾದಾಗ ಸಾರ್ಥಕವೆನಿಸುತ್ತದೆ ಎಂದ ಮುಖ್ಯಮಂತ್ರಿಗಳು, ಗ್ರಾಮೀಣ ಜನರು, ವ್ಯಕ್ತಿಗಳ ಸಂಶೋಧನೆಗಳಿಗೂ ಮಾನ್ಯತೆ ನೀಡುವ ವ್ಯವಸ್ಥೆ ರೂಪಿಸುವ ಅಗತ್ಯವಿದೆ. ಜೊತೆಗೆ ಈ ನೀತಿ ಯಾವುದೇ ಒಂದು ನಿರ್ದಿಷ್ಟ ವಲಯಕ್ಕೆ ಸೀಮಿತವಾಗದೆ ಎಲ್ಲ ವಲಯಗಳಿಗೂ ಅನ್ವಯವಾಗುವಂತೆ ರೂಪಿಸಬೇಕೆಂದು ಸಲಹೆ ನೀಡಿದರು.
ಇದಕ್ಕೆ ಪೂರಕವಾಗಿ ರಾಜ್ಯಮಟ್ಟದ ಸಂಶೋಧನೆ ಮತ್ತು ಅಭಿವೃದ್ಧಿ ಕೌನ್ಸಿಲ್ ಹಾಗೂ ಫೌಂಡೇಷನ್ ಗಳನ್ನು ಸ್ಥಾಪಿಸುವ ಮೂಲಕ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಜಾರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಇದರಲ್ಲಿ ಉದ್ಯಮ, ಶೈಕ್ಷಣಿಕ ವಲಯ ಹಾಗೂ ಉದ್ಯಮದ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಗಳಿಗೂ ಪ್ರಾತಿನಿಧ್ಯ ನೀಡುವಂತೆ ಸೂಚಿಸಿದರು.
ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಸಚಿವ ಸಂಪುಟದ ಮುಂದಿಟ್ಟು, ಅನುಮೋದನೆ ಪಡೆಯಲಾಗುವುದು. ನೀತಿಯ ಜಾರಿಗೆ ಟಾಸ್ಕ್ ಫೋರ್ಸ್ ನೊಂದಿಗೆ ಮತ್ತೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ನುಡಿದರು.
Rain In Karnataka: ರಾಜ್ಯಾಧ್ಯಂತ ಮುಂದಿನ 5 ದಿನ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಐಟಿ, ಬಿಟಿ, ಕೌಶಲ್ಯಾಭಿವೃದ್ಧಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಐಟಿ, ಬಿಟಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಅಭಿವೃದ್ಧಿ ಆಯುಕ್ತರು ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.