ಬೆಂಗಳೂರು: ಕರ್ನಾಟಕದ ದೇವಾಲಯಗಳು ಆರ್ಟಿಐ ಕಾಯ್ದೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಪ್ರಾಧಿಕಾರಗಳಲ್ಲ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ ಸಂಬಂಧ ಅಖಿಲ ಕರ್ನಾಟಕ ಹಿಂದೂ ದೇವಾಲಯ ಅರ್ಚಕರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ತಿರಸ್ಕರಿಸಿದೆ.
ಈ ಸಂಬಂಧ 2007ರಲ್ಲಿ ಹೊರಡಿಸಲಾದ ಅಧಿಸೂಚನೆ ಮತ್ತು ನಂತರದ ಅಧಿಸೂಚನೆಗಳನ್ನು ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.
‘ಸಿಬ್ಬಂದಿಗೆ ಕಿರುಕುಳ’
ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸುವ ಮೂಲಕ ಕೆಲವು ವ್ಯಕ್ತಿಗಳು ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬುದು ಅರ್ಜಿದಾರರ ದೂರು.
ದತ್ತಿ ಕಾಯ್ದೆ
ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯ್ದೆಯಡಿ ಬರುವ ದೇವಾಲಯಗಳು ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯ ಅವಶ್ಯಕತೆಗಳನ್ನು ಅನುಸರಿಸಲು ಕೇಳಲಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ನ್ಯಾಯಪೀಠ ಗಮನಿಸಿದೆ.
ಮಾಹಿತಿಯನ್ನು ಪ್ರಧಾನ ಮಾಹಿತಿ ಅಧಿಕಾರಿ ಒದಗಿಸಬೇಕೇ ಹೊರತು ಅರ್ಚಕರಲ್ಲ ಎಂದು ಅದು ಹೇಳಿದೆ.
ಈ ವಿಷಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.