ಬೆಂಗಳೂರು : ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ 30 ವರ್ಷಗಳಲ್ಲೇ ಸುರಿದ ದಾಖಲೆಯ ಮಳೆಯಾಗಿದೆ.
ಹೌದು, ಕಳೆದ ವರ್ಷ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.25ರಷ್ಟು, ಹಿಂಗಾರು ಅವಧಿಯಲ್ಲಿ ಶೇ.38ರಷ್ಟು ಮಳೆ ಕೊರತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲಿ ಭೀಕರ ಬರ ಸೃಷ್ಟಿಯಾಗಿತ್ತು. ಹಲವು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿತ್ತು.
1994ರಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.30ರಷ್ಟು ಅಧಿಕ ಪ್ರಮಾಣದಲ್ಲಿ ಮುಂಗಾರು ಮಳೆಯಾಗಿತ್ತು.ಆದರೆ ಈ ಬಾರಿ 28% ಹೆಚ್ಚು ಮಳೆಯಾಗಿದೆ. ಜೂನ್ನಲ್ಲಿ ಆಗಿದ್ದ ಮಳೆ ಕೊರತೆಯನ್ನು ಜುಲೈ ಮಳೆ ನೀಗಿಸಿದೆ.ದಕ್ಷಿಣ ಒಳನಾಡಲ್ಲಿ 42%, ಉತ್ತರ ಒಳನಾಡಲ್ಲಿ 31%, ಮಲೆನಾಡಲ್ಲಿ 28%, ಕರಾವಳಿಯಲ್ಲಿ 24% ಅಧಿಕ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 61%, ಬೆಳಗಾವಿಯಲ್ಲಿ 60% ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ರಾಜ್ಯದ ಬಹುತೇಕ ಜಲಾಶಯ ಭರ್ತಿಯಾಗಿವೆ. ಬಿತ್ತನೆ ಪ್ರಮಾಣವೂ ದ್ವಿಗುಣಗೊಂಡಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲೂ ಹೆಚ್ಚಿನ ಮಳೆ ಮುನ್ಸೂಚನೆ ಇದೆ. ಇದರಿಂದ ಪ್ರವಾಹ, ನೆರೆ ಭೀತಿ, ಬೆಳೆಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಆದರೆ, ಈ ಬಾರಿ ಮುಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಅವಧಿಯ ನಾಲ್ಕು ತಿಂಗಳ ಪೈಕಿ ಪ್ರಸಕ್ತ ಜೂನ್ ಮತ್ತು ಜುಲೈ ಅವಧಿಯಲ್ಲಿ ಹೆಚ್ಚು ಹಾಗೂ ದಾಖಲೆಯ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಅಂಕಿ-ಅಂಶಗಳು ದೃಢಪಡಿಸಿದೆ.