ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಹಾಗೂ ಇತರ ಐವರ ವಿರುದ್ಧ ಸಿಬಿಐ ಮತ್ತು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ದೂರು ದಾಖಲಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ದಂತ ವೈದ್ಯಕೀಯ ಕಾಲೇಜಿನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥರಾಗಿರುವ ರಾಧಾಕೃಷ್ಣ ದೊಡ್ಡಮನಿ ಅವರನ್ನು ಪ್ರಮುಖ ಆರೋಪಿ ಎಂದು ದೂರಿನಲ್ಲಿ ಹೆಸರಿಸಲಾಗಿದೆ. ಭ್ರಷ್ಟಾಚಾರ, ವಂಚನೆ, ನಕಲಿ ದಾಖಲೆಗಳ ಸೃಷ್ಟಿ, ಫೋರ್ಜರಿ ಮತ್ತು ಅಧಿಕಾರ ದುರುಪಯೋಗದ ಆರೋಪಗಳು ಅವರ ವಿರುದ್ಧ ದಾಖಲಾಗಿವೆ.
ಎಚ್.ಎಸ್.ಮಹದೇವ ಪ್ರಸಾದ್, ಡಾ.ಎನ್.ಟಿ.ಮುರಳಿ ಮೋಹನ್, ವಿ.ಎಸ್.ಕುಬೇರ್ ಬಂಧಿತ ಆರೋಪಿಗಳು. ಸಾರ್ವಜನಿಕ ಸಂಪರ್ಕಾಧಿಕಾರಿ ಅಮಾನುಲ್ಲಾ ಖಾನ್ ವಿರುದ್ಧವೂ ದೂರು ದಾಖಲಾಗಿದೆ.
ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ಗಳನ್ನು ಅಧ್ಯಯನ ಮಾಡಲು ಸೀಟುಗಳನ್ನು ಒದಗಿಸಲು ಶ್ರೀಮಂತ ಕುಟುಂಬಗಳ ಅನುತ್ತೀರ್ಣ ಮತ್ತು ಅನರ್ಹ ವಿದ್ಯಾರ್ಥಿಗಳಿಂದ ನೂರಾರು ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ದೂರುದಾರ ಎನ್.ಆರ್.ರಮೇಶ್ ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಮತ್ತು ಡಾ.ಬಿ.ಆರ್.ಅಂಬೇಡ್ಕರ್ ದಂತ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 800 ಕೋಟಿ ರೂ.ಗೂ ಹೆಚ್ಚು ಹಗರಣ ನಡೆದಿದೆ ಎಂದಿದ್ದಾರೆ.