ಬೆಂಗಳೂರು: ಸಚಿವ ಜಮೀರ್ ಪುತ್ರ ಝೈದ್ ಖಾನ್ ನಟನೆಯ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜೀವ್ ಗೌಡಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ನೋಟಿಸ್ ನೀಡಿದ್ದಾರೆ. 7 ದಿನಗಳ ಒಳಗೆ ನೋಟಿಸ್ಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.
ಕೆಪಿಸಿಸಿ ನೋಟಿಸ್ನಲ್ಲಿ ಏನಿದೆ?
ತಾವು ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮದ ಸಭೆಯೊಂದಕ್ಕೆ ಸಂಬಂಧಪಟ್ಟಂತೆ ಬ್ಯಾನರ್ಗಳನ್ನು ಹಾಕಿರುವ ಬಗ್ಗೆ ಪೌರಾಯುಕ್ತರೊಂದಿಗೆ ದೂರವಾಣಿ ಸಂಭಾಷಣೆ ನಡೆಸುವಾಗ ವ್ಯಕ್ತಿಗತ ನಿಂದನೆ ಮಾಡಿ, ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದನೆ ಮಾಡಿರುವ ವಿಷಯಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ ಎಂದಿದೆ.
ತಮ್ಮ ಈ ವರ್ತನೆ ಹಾಗೂ ತಾವು ಸದರಿ ನಗರಸಭೆ ಪೌರಾಯುಕ್ತರೊಂದಿಗೆ ಆಡಿರುವ ಮಾತುಗಳಿಂದ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತದೆ. ತಾವು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದ್ದೀರೆಂದು ತಿಳಿದು ನೋಟಿಸ್ ನೀಡಲಾಗಿದೆ. ಈ ನೋಟಿಸ್ ನೀಡಿದ ಒಂದು ವಾರದ ಒಳಗಾಗಿ ಸೂಕ್ತ ಸಮಜಾಯಿಷಿ ನೀಡಬೇಕು. ಇಲ್ಲವಾದರೆ, ಈ ಬಗ್ಗೆ ಶಿಸ್ತು ಸಮಿತಿಯು ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಜಿ.ಸಿ.ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.








