ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ನಂತ್ರ, ಇಂದು ಕೆ ಎಸ್ ಸಿ ಎಯಿಂದ ತುರ್ತು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಾಲ್ತುಳಿತ ದುರಂತದ ಹೊಣೆಹೊತ್ತು ರಾಜೀನಾಮೆ ನೀಡಿದ್ದಂತ ಕಾರ್ಯದರ್ಶಿ, ಖಜಾಂಚಿಯ ರಾಜೀನಾಮೆಯನ್ನು ಅಂಗೀಕರಿಸಿದಂತ ನಿರ್ಧಾರ ಕೈಗೊಳ್ಳಲಾಗಿದೆ.
ಇಂದಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಸ್ ಸಿ ಎ ಅಧ್ಯಕ್ಷ ರಘುರಾಮ್ ಭಟ್ ಅವರು, ಇಂದು ತುರ್ತು ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ನೀಡಿದ್ದರ ಬಗ್ಗೆ ಚರ್ಚಿಸಲಾಯಿತು. ಅಂತಿಮವಾಗಿ ಶಂಕರ್ ಹಾಗೂ ಜೈರಾಮ್ ಅವರ ರಾಜೀನಾಮೆ ಅಂಗೀಕರಿಸಲಾಗಿದೆ ಎಂದರು.
ಕೆ ಎಸ್ ಸಿ ಎ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜೈರಾಮ್ ಅವರ ರಾಜೀನಾಮೆ ಅಂಗೀಕರಿಸಲಾಗಿದ್ದು, ರಾಜೀನಾಮೆ ನೀಡಿದವರ ಜಾಗಕ್ಕೆ ಯಾರನ್ನೂ ಆಯ್ಕೆ ಮಾಡಿಲ್ಲ. ಪ್ರಕರಣ ತನಿಖಾ ಹಂತದಲ್ಲಿದೆ. ಹೀಗಾಗಿ ಹೆಚ್ಚು ಮಾತನಾಡಲ್ಲ. ಸಿಐಡಿ ತನಿಖೆಗೆ ನಾವು ಸಹಕಾರ ನೀಡುತ್ತೇವೆ ಎಂದರು.