ಶಿವಮೊಗ್ಗ: ಸಾಗರದ ಐತಿಹಾಸಿಕ ಪ್ರಸಿದ್ಧವಾದ ಮಾರಿಕಾಂಬಾ ದೇವಿಯ ಜಾತ್ರೆ 9 ದಿನಗಳ ಕಾಲ ನಡೆಯುತ್ತಿದ್ದು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಕುಟುಂಬ ಸಮೇತ ತಾಯಿ ಮಾರಿಕಾಂಬಾ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಆ ಬಳಿಕ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ವತಿಯಿಂದ ನೀಡಿದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐತಿಹಾಸಿಕ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಅತ್ಯಂತ ಸಡಗರ ಸಂಭ್ರಮದಿಂದ ನಡೆಯುತ್ತಿದೆ. ಈ ಜಾತ್ರೆಯಲ್ಲಿ ಊರಿಗೆ ಊರೇ ಪಾಲ್ಗೊಂಡಿದೆ. ಲಕ್ಷಾಂತರ ಭಕ್ತರು ಜಾತ್ರೆಗೆ ಬಂದು ಹೋಗುತ್ತಿದ್ದು ಅತ್ಯಂತ ವ್ಯವಸ್ಥಿತವಾಗಿ ಜಾತ್ರೆಯನ್ನು ಕಟ್ಟಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಇದೇ ಮೊದಲ ಬಾರಿಗೆ ನಾನು ಸಾಗರದ ಜಾತ್ರೆಯಲ್ಲಿ ಪಾಲ್ಗೊಂಡಿದ್ದೇನೆ. ಈ ಜಾತ್ರೆ ಕರ್ನಾಟಕದ ದೊಡ್ಡ ಜಾತ್ರೆಗಳಲ್ಲಿ ಒಂದಾಗಿದ್ದು ತಾಯಿ ಮಾರಿಕಾಂಬೆಗೆ ಪೂಜೆ ಸಲ್ಲಿಸುವ ಭಾಗ್ಯ ನನಗೆ ಲಭ್ಯವಾಗಿದೆ ಎಂದ ಅವರು, ಜಾತ್ರೆಯನ್ನು ಮುನ್ನಡೆಸುವಲ್ಲಿ ತೊಡಗಿಕೊಂಡಿರುವ ಎಲ್ಲರಿಗೂ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.

ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಮಾರ್ಚ್ ಎರಡನೇ ವಾರದಲ್ಲಿ ಬೀದರ್ ನಲ್ಲಿ ನಡೆಯಲಿದೆ, ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದ್ದಾರೆ. ಸಮ್ಮೇಳನಕ್ಕೆ ಹಲವು ಸಮಿತಿಗಳನ್ನು ರಚಿಸಲಾಗಿದೆ ಎಂದ ಅವರು, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ, ವಿಚಾರಗೋಷ್ಠಿಗಳು ನಡೆಯಲಿವೆ. ಪತ್ರಕರ್ತರಿಗೆ ಪಿಂಚಣಿ, ಆರೋಗ್ಯ ವಿಮೆ ಹಾಗೂ ನಿವೃತ್ತಿ ವೇತನಕ್ಕೆ ಸಂಬಂಧಿಸಿದ ಕೆಲವು ನಿಯಮಗಳನ್ನು ಸಡಿಲಗೊಳಿಸಲು ರಾಜ್ಯದ ಮುಖ್ಯಮಂತ್ರಿಗಳಿಗೆ ಕೋರಿದ್ದೇವೆ ಎಂದರು.
ರಾಜ್ಯದ ಪತ್ರಕರ್ತರಿಗೆ ಬಸ್ ಪಾಸಿಗೆ ಸಂಬಂಧಿಸಿದಂತೆ ಕೂಡ ತುರ್ತು ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದೇವೆ. ಕರ್ನಾಟಕದ ಅತಿ ದೊಡ್ಡ ಸಂಘಟನೆ ಆಗಿರುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ 10 ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿದೆ. ಡಿ. ವಿ. ಗುಂಡಪ್ಪನವರು ಆರಂಭಿಸಿದ ಈ ಸಂಸ್ಥೆ ಶತಮಾನದ ಅಂಚಿನಲ್ಲಿದೆ ಎಂದ ಅವರು, ಸಮ್ಮೇಳನಕ್ಕೆ 4000ಕ್ಕೂ ಅಧಿಕ ಪ್ರತಿನಿಧಿಗಳು ಪಾಲ್ಗೊಳ್ಳುವ ನೀರಿಕ್ಷೆ ಇದ್ದು, ಈಗಾಗಲೇ ಮೂರು ಸಭೆಗಳನ್ನು ಬೀದರ್ ನಲ್ಲಿ ನಡೆಸಲಾಗಿದೆ. ತಾಲೂಕು ,ಜಿಲ್ಲೆ ಎಲ್ಲಾ ಕೇಂದ್ರಗಳಿಂದಲೂ ಪತ್ರಕರ್ತರು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾರಿಕಾಂಬ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ. ಎನ್. ನಾಗೇಂದ್ರ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಅಧ್ಯಕ್ಷರಾದ ವೈದ್ಯನಾಥ್, ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಸಾಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ, ಉಪಾಧ್ಯಕ್ಷ ರವಿ ನಾಯ್ಡು, ಹಿರಿಯ ಪತ್ರಕರ್ತರಾದ ನಾಗೇಶ್ ನಾಯಕ ಸೇರಿದಂತೆ ಇತರರು ಹಾಜರಿದ್ದರು.

ನಂತರ ಸಿಗಂದೊರಿಗೆ ತೆರಳಿದ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರನ್ನು, ದೇವಾಲಯ ಸಮಿತಿ ಕಾರ್ಯದರ್ಶಿ ರವಿಕುಮಾರ್ ರವರು ವಿಶೇಷ ಪೂಜೆಗೆ ಅವಕಾಶ ಮಾಡಿಕೊಟ್ಟು, ಅಲ್ಲದೇ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ಶಿವಾನಂದ ತಗಡೂರು ಅವರು ಸಿಗಂದೂರು ಸೇತುವೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಸಾಗರದ ಮಾರಿಕಾಂಬೆಗೆ ಬೃಹತ್ ಗಾತ್ರದ ಹೂವಿನ ಹಾರ ಅರ್ಪಿಸಿದ ‘ರಾಯಲ್ ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಸಂಸ್ಥೆ’








