ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಆದೇಶ ಹೊರಡಿಸಿದೆ.
ಏಪ್ರಿಲ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದ್ದು, ಮೌಲ್ಯಮಾಪನ ಪ್ರಕ್ರಿಯೆಯನ್ನು ವೇಗಗೊಳಿಸಲು ಈ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಒಟ್ಟು ಮೌಲ್ಯಮಾಪನ ಕೇಂದ್ರಗಳು: ಬೆಂಗಳೂರು ಉತ್ತರ/ದಕ್ಷಿಣ, ಶಿವಮೊಗ್ಗ, ಮಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 68 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ನಿಯೋಜಿತ ಸಿಬ್ಬಂದಿ: ಶಿಬಿರದ ಮೇಲ್ವಿಚಾರಕರು, ಮುಖ್ಯ/ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಸಹಾಯಕ ಮೌಲ್ಯಮಾಪಕರಾಗಿ ಸರ್ಕಾರಿ ಪಿಯು ಕಾಲೇಜುಗಳ ಶಿಕ್ಷಕರನ್ನು ನೇಮಿಸಲಾಗಿದೆ.
ಕಟ್ಟುನಿಟ್ಟಿನ ಆದೇಶ: ಯಾವುದೇ ಕಾರಣಕ್ಕೂ ಮೌಲ್ಯಮಾಪನ ಕಾರ್ಯಕ್ಕೆ ಗೈರು ಹಾಜರಾಗಬಾರದು. ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಹಾಜರಿದ್ದು ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:
ಮೌಲ್ಯಮಾಪನ ಕಾರ್ಯದಲ್ಲಿ ವಿಳಂಬ ಮಾಡುವುದು, ನಿರ್ಲಕ್ಷ್ಯ ತೋರುವುದು ಅಥವಾ ಗೈರು ಹಾಜರಾಗುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಇಂತಹವರ ವಿರುದ್ಧ ಈ ಕೆಳಗಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು:
ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಕಲಂ 122 ರನ್ವಯ ಕಾನೂನು ಕ್ರಮ.
ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957 ರ ನಿಯಮ 11 ಮತ್ತು 12 ರನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು.
ಈ ವಿಷಯವನ್ನು ಜಿಲ್ಲಾ ಉಪನಿರ್ದೇಶಕರು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಎಲ್ಲಾ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.









