ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2026ರ ಫಲಿತಾಂಶವು ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತಕ್ಕೆ ಅಂತ್ಯ ಹಾಡಿದೆ. ಈ ಆಘಾತಕಾರಿ ಸೋಲಿನ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ಸುಪ್ರೀಮೋ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ “ಲೂಟಿ” ಆರೋಪ ಮಾಡಿದ್ದಾರೆ.
ಚುನಾವಣಾ ಫಲಿತಾಂಶದ ಟ್ರೆಂಡ್ ಮತ್ತು ತಮ್ಮ ಭದ್ರಕೋಟೆ ಭವಾನಿಪುರದಲ್ಲಿ ಅನುಭವಿಸಿದ ಸೋಲಿನ ನಂತರ ಮಾತನಾಡಿದ ಅವರು ಭಾರಿ ಆಕ್ರೋಶ ವ್ಯಕ್ತಪಡಿಸಿದರು:
”ಲೂಟಿ, ಲೂಟಿ, ಲೂಟಿ! ಇದು ಪ್ರಜಾಪ್ರಭುತ್ವದ ವಿಜಯವಲ್ಲ, ಬದಲಿಗೆ ಮತಗಳ ಲೂಟಿ. ಚುನಾವಣಾ ಆಯೋಗ ಮತ್ತು ಬಿಜೆಪಿ ಸೇರಿ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಫಲಿತಾಂಶವನ್ನು ತಿರುಚಿದ್ದಾರೆ. ನಮ್ಮ 100 ಸೀಟುಗಳನ್ನು ಕದಿಯಲಾಗಿದೆ.”
“ನಾವು ಸೋಲೊಪ್ಪುವವರಲ್ಲ. ಸೋತ ತಕ್ಷಣ ಎಲ್ಲವೂ ಮುಗಿಯಿತು ಎಂದು ಭಾವಿಸಬೇಡಿ. ನಾವು ಮತ್ತೆ ಪುಟಿದೇಳುತ್ತೇವೆ (We’ll Bounce Back),” ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.
ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಟಿಎಂಸಿ ಮುನ್ನಡೆಯಲ್ಲಿದ್ದ ಕ್ಷೇತ್ರಗಳ ಫಲಿತಾಂಶ ಪ್ರಕಟಿಸಲು ವಿಳಂಬ ಮಾಡಲಾಗಿದೆ ಎಂದು ದೂರಿದ್ದಾರೆ.
ಫಲಿತಾಂಶದ ವಿರುದ್ಧ ಸುಮ್ಮನೆ ಕೂರುವುದಿಲ್ಲ, ಶೀಘ್ರದಲ್ಲೇ ರಾಜ್ಯಾದ್ಯಂತ ಜನಾಂದೋಲನ ರೂಪಿಸುವುದಾಗಿ ಅವರು ಎಚ್ಚರಿಸಿದ್ದಾರೆ.








