ಮಂಡ್ಯ : ಮದ್ದೂರು ನಗರ ಸಭೆಯ ನೂತನ ಪ್ರಭಾರ ಪೌರಾಯುಕ್ತರಾಗಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಮದ್ದೂರು ಪುರಸಭೆಯ ಮುಖ್ಯಾಧಿಕಾರಿಯವರು ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ಕಛೇರಿ ವ್ಯವಸ್ಥಾಪಕ ಶ್ರೀಧರ್ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೇಲ್ದರ್ಜೆಗೆರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನೂತನ ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪರಶುರಾಮ್ ಸತ್ತಿಗೇರಿ ಅವರು ಜನಪ್ರತಿನಿಧಿಗಳು ಹಾಗೂ ಕಚೇರಿ ಸಿಬ್ಬಂದಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಿ ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಮದ್ದೂರು ಪುರಸಭೆ ನಗರಸಭೆಯಾಗಿ ಮೆಲ್ದರ್ಜೆಗೆರಿದ್ದು, ನಗರದಲ್ಲಿ ತುಂಬಾ ಕೆಲಸಗಳು ಆಗಬೇಕಾಗಿದೆ. ಕೆಲ ದಿನಗಳಲ್ಲೆ ಸ್ಥಳೀಯ ಸಂಸ್ಥೆ ಚುನಾವಣೆ ಎದುರಾಗಲಿದ್ದು, ಹೀಗಾಗಿ ಅತೀ ಜರೂರಾಗಿ ವಾರ್ಡ್ ಗಳ ವಿಂಗಡಣೆ ಕೆಲಸವಾಗಬೇಕಾಗಿದೆ. ಅ.2 ರಂದು ಗಾಂಧಿ ಜಯಂತಿ ಅಂಗವಾಗಿ ನಗರದಲ್ಲಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸಹ ಸಹಕರಿಸಬೇಕೆಂದು ಮನವಿ ಮಾಡಿದರು.
ತೆರಿಗೆ, ಇ-ಖಾತಾ ಹಾಗೂ ಪಟ್ಟಣದಲ್ಲಿ ರಸ್ತೆ ಗುಂಡಿಗಳ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿಯ ಬಗ್ಗೆ ಸಚಿವರು, ಸಂಸದರು ಹಾಗೂ ಶಾಸಕರು, ನಗರಸಭಾ ಅಧ್ಯಕ್ಷರ ಜೊತೆಯಲ್ಲಿ ಚರ್ಚಿಸಿ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರಸಭೆಯ ಕೆಲಸಗಳಿಗೆ ಕಚೇರಿ ಸಿಬ್ಬಂದಿ ಕೊರತೆ ಇದೆ. ಅದನ್ನು ನೀಗಿಸಲು ಸರ್ಕಾರ ಮತ್ತು ಜಿಲ್ಲಾಡಳಿತದ ಜೊತೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.
ಇದೇ ವೇಳೆ ನಗರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಪ್ರಭಾರ ಮುಖ್ಯಾಧಿಕಾರಿ ಶ್ರೀಧರ್, ಸಿಬ್ಬಂದಿಗಳು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಶಿವಮೊಗ್ಗ: ಮಕ್ಕಳು ಕ್ರೀಡಾಕೂಟಗಳಲ್ಲಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು
ಬೆಂಗಳೂರಲ್ಲಿ ಒಂದು ತಿಂಗಳ ಒಳಗಾಗಿ ರಸ್ತೆ ಗುಂಡಿ ಮುಚ್ಚಿ: ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ಫಿಕ್ಸ್