ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಧಿಕಾರ ಹಿಡಿಯಲು ನಡೆಯುತ್ತಿರುವ ಜಿದ್ದಾಜಿದ್ದಿ ಈಗ ಹೊಸ ತಿರುವು ಪಡೆದುಕೊಂಡಿದೆ. ಡಿಎಂಕೆ ಅಥವಾ ಎಐಎಡಿಎಂಕೆ ಮೈತ್ರಿಕೂಟಗಳು ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ, ತಮ್ಮ ಪಕ್ಷದ ಎಲ್ಲಾ 107 ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಎಚ್ಚರಿಕೆ ನೀಡಿದೆ ಎಂದು ವರದಿಗಳು ತಿಳಿಸಿವೆ.
ಯಾವುದೇ ಕಾರಣಕ್ಕೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಾಂಪ್ರದಾಯಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಟಿವಿಕೆ ಸ್ಪಷ್ಟಪಡಿಸಿದೆ. ಒಂದು ವೇಳೆ ಜನಾದೇಶಕ್ಕೆ ವಿರುದ್ಧವಾಗಿ ಡಿಎಂಕೆ ಅಥವಾ ಎಐಎಡಿಎಂಕೆ ಸರ್ಕಾರ ರಚಿಸಲು ಯತ್ನಿಸಿದರೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಹೋಗಲು ಸಿದ್ಧ ಎಂಬ ಸಂದೇಶ ರವಾನಿಸಿದೆ.
ಚುನಾವಣೆಯಲ್ಲಿ ಯಾವುದೇ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಗದ ಕಾರಣ, ಸಣ್ಣ ಪಕ್ಷಗಳ ಬೆಂಬಲ ಪಡೆಯಲು ದೊಡ್ಡ ಪಕ್ಷಗಳು ಕಸರತ್ತು ನಡೆಸುತ್ತಿವೆ. ಆದರೆ ವಿಜಯ್ ಅವರ ಈ ‘ಮಾಸ್’ ನಿರ್ಧಾರವು ಉಳಿದ ಪಕ್ಷಗಳಿಗೆ ನಡುಕ ಹುಟ್ಟಿಸಿದೆ.
107 ಶಾಸಕರು ಒಟ್ಟಾಗಿ ರಾಜೀನಾಮೆ ನೀಡಿದರೆ ತಮಿಳುನಾಡಿನಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಲಿದ್ದು, ರಾಜ್ಯವು ಮತ್ತೆ ಉಪಚುನಾವಣೆ ಅಥವಾ ಮಧ್ಯಂತರ ಚುನಾವಣೆಯನ್ನು ಎದುರಿಸಬೇಕಾದ ಪರಿಸ್ಥಿತಿ ಬರಬಹುದು.
ಅಚಲ ಸಿದ್ಧಾಂತ: ನಾವು ಅಧಿಕಾರಕ್ಕಾಗಿ ಬಂದಿಲ್ಲ, ಬದಲಾವಣೆಗಾಗಿ ಬಂದಿದ್ದೇವೆ. ಜನಾದೇಶಕ್ಕೆ ಗೌರವ ಸಿಗದಿದ್ದರೆ ನಾವು ವಿಧಾನಸಭೆಯಲ್ಲಿ ಕೂರುವುದಿಲ್ಲ ಎಂದು ಟಿವಿಕೆ ಮೂಲಗಳು ತಿಳಿಸಿವೆ.








