ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆಯಲ್ಲಿ ಕಿಂಚಿತ್ತು ಲೋಪವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಸಚಿವರು ಇಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಭೆ ನಡೆಸಿ ಕುಡಿಯುವ ನೀರು ಸರಬರಾಜು ಸಂಬಂಧದಲ್ಲಿ ಹಲವು ಸೂಚನೆಗಳನ್ನು ನೀಡಿದರು.
ಕಳೆದ ವರ್ಷದ ಸಮಸ್ಯೆಗಳನ್ನು ಅವಲೋಕನ ಮಾಡಿ
ಕಳೆದ ವರ್ಷ ಜಿಲ್ಲೆಗಳಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ಅವಲೋಕನ ಮಾಡಿ ಮುಂಜಾಗರೂಕತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ ಸಚಿವರು ಕೊಳವೆ ಬಾವಿಗಳ ದುರಸ್ತಿ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯುವುದು, ವಾಹನಗಳ ಮೂಲಕ ನೀರು ಸರಬರಾಜು ಸೇವೆಗೆ ಆದ್ಯತೆ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಭೆಗಳನ್ನು ನಡೆಸಬೇಕು, ತಾಲ್ಲೂಕು ಪಂಚಾಯತಿಗಳ ನಿರ್ವಹಣಾಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರುಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ನಿರಂತರ ಸಭೆಗಳನ್ನು ನಡೆಸಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನಿಗಾ ವಹಿಸಬೇಕು, ನೀರು ಹಾಗೂ ವಿದ್ಯುತ್ ಸರಬರಾಜಿನಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲು ಈಗಾಗಲೆ ನಿರ್ದೇಶನ ನೀಡಿದ್ದು, ಯಾವುದೇ ಲೋಪವಾಗದಂತೆ ಈ ಸೂಚನೆಗಳನ್ನು ಪಾಲಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಇ-ಸ್ವತ್ತು ಸಮಿತಿ ಬಂದಾಗ ಮಾಹಿತಿ ನೀಡಿ
ಇ-ಸ್ವತ್ತು ಅ ನುಷ್ಠಾನಕ್ಕಾಗಿ ಸಮಿತಿ ರಚಿಸಲಾಗಿದ್ದು, ಸಮಿತಿಯ ಸದಸ್ಯರು ಪ್ರವಾಸ ಮಾಡಿ ಮಾಹಿತಿ ಸಂಗ್ರಹಿಸಲಿದ್ದಾರೆ, ಆ ಸಂದರ್ಭದಲ್ಲಿ ಸಮಿತಿಗೆ ಮಾಹಿತಿ ನೀಡಲು ಕ್ರಮ ವಹಿಸಬೇಕು ಎಂದೂ ಸಚಿವರು ತಿಳಿಸಿದರು. ಕಳೆದ ಸಾಲಿನ ಕಾರ್ಯಕ್ರಮಗಳನ್ನು ಕಾರ್ಯಗತ ಮಾಡಲು ಹಾಗೂ ಹೊಸ ವರ್ಷದ ಆಯವ್ಯಯದ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೀಲಿನಕ್ಷೆ ತಯಾರಿಸಲು ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ನಿರ್ದೇಶಿಸಿದ ಸಚಿವರು ಈ ವರ್ಷ ತೆರಿಗ ಸಂಗ್ರಹ ತೃಪ್ತಿದಾಯಕವಾಗಿದ್ದು ಕಾರಣರಾದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಚಿವರು ಅಭಿನಂದಿಸಿ, ಈ ವರ್ಷ ಮತ್ತಷ್ಟು ಉತ್ಸಾಹದಿಂದ ತೆರಿಗೆ ಸಂಗ್ರಹಿಸಿ ಗುರಿ ತಲುಪಲು ಸೂಚನೆ ನೀಡಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್