ಬೆಂಗಳೂರು : ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (ಎನ್ಎಂಸಿ) ಆಗ್ರಹಿಸಿದೆ ಎಂದು *ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ.
ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಎಸ್ಎಬಿವಿಎಂಸಿ) 2019 ರ ಬ್ಯಾಚ್ನ ಪದವಿ ಪ್ರದಾನ ಸಮಾರಂಭದಲ್ಲಿ ಸಚಿವರು ಮಾತನಾಡಿದರು.
ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ, ಆದರೆ ಇದಕ್ಕೆ ಪ್ರತಿಯಾಗಿ ಒಂದು ಲಕ್ಷ ವೈದ್ಯಕೀಯ ಸೀಟುಗಳು ಮಾತ್ರ ಲಭ್ಯವಿದೆ. ಇದರಿಂದ ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರ ಹೆಚ್ಚಾಗುತ್ತಿದೆ ಎಂದು ಹೇಳಿದರು.
“ಈ ಅಸಮಾನತೆಯನ್ನು ತಕ್ಷಣ ನಿವಾರಿಸಬೇಕು. ಭಾರತದಲ್ಲಿ ತರಬೇತಿ ಪಡೆಯಲಿರುವ ವೈದ್ಯರು ವಿದೇಶದಲ್ಲಿಯೂ ಹೆಚ್ಚು ಮನ್ನಣೆ ಗಳಿಸುತ್ತಿದ್ದಾರೆ. ನಮ್ಮ ವೈದ್ಯರು ಜಗತ್ತಿನ ಎಲ್ಲೆಡೆ ಚಿಕಿತ್ಸೆ ಒದಗಿಸುತ್ತಿದ್ದಾರೆ” ಎಂದು ಅವರು ಹೇಳಿದರು
ಭಾರತೀಯ ವೈದ್ಯರಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ
ಜಾಗತಿಕವಾಗಿ ಭಾರತೀಯ ವೈದ್ಯಕೀಯ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದೆ. ಬೇಡಿಕೆ ಮತ್ತು ಲಭ್ಯತೆಯ ಅಂತರ ಕಡಿಮೆ ಮಾಡಲು ಎನ್ಎಂಸಿ ಮಧ್ಯಪ್ರವೇಶಿಸಬೇಕು” ಎಂದು ಸಚಿವರು ತಿಳಿಸಿದರು.
ವೇದಿಕೆಯ ಮೇಲೆ ಹಾಜರಿದ್ದ ಎನ್ಎಂಸಿ ಅಧ್ಯಕ್ಷರಾದ ಡಾ. ಬಿ.ಎನ್. ಗಂಗಾಧರ ಅವರಿಗೆ ಈ ಕುರಿತು ಸಚಿವರು ಮನವರಿಕೆ ಮಾಡಿಕೊಟ್ಟರು.
ಈ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 800 ಪದವಿಪೂರ್ವ ಮತ್ತು 600 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಅನುಮೋದನೆ ಕೋರಿ ಎನ್ಎಂಸಿ ಗೆ ಈಗಾಗಲೇ ಔಪಚಾರಿಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶರಣ ಪ್ರಕಾಶ ಪಾಟೀಲ ಸ್ಪಷ್ಟಪಡಿಸಿದರು
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಬಿ.ಎಲ್ ಮತ್ತು ಎಸ್ಎಬಿವಿಎಂಸಿ ನಿರ್ದೇಶಕ ಡಾ. ಮನೋಜ್ ಕುಮಾರ್ ಹೆಚ್.ವಿ ಉಪಸ್ಥಿತರಿದ್ದರು.