ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಇವರಾಜ್ ತಂಗಡಗಿಗೆ MLC ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಈ ಎಲ್ಲ ವಿಷಯಗಳನ್ನು ಅನುಮೋದಿಸಿ, ಅವುಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಸಭೆ ಕರೆದು ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.
ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕೆಳಕಂಡ ಪ್ರಮುಖ ನಿರ್ಣಯಗಳನ್ನು ತಕ್ಷಣ ಕಾರ್ಯಗತಗೊಳಿಸುವ ಸಂಬಂಧ ತಕ್ಷಣ ತಮ್ಮ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಎಲ್ಲರನ್ನು ಆಹ್ವಾನಿಸಲು ಮನವಿ ಮಾಡಿದ್ದಾರೆ.
ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಸಮ್ಮುಖದಲ್ಲಿ ಕೈಗೊಂಡಿದ್ದ ಪ್ರಮುಖ ನಿರ್ಣಯಗಳು
- ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮ-2022 ಅನ್ನು ರಾಜ್ಯದಲ್ಲಿ ಸಮಗ್ರವಾಗಿ ಜಾರಿಗೆ ತರಲು ಒತ್ತಾಯಿಸುವುದು.
- ಸರ್ಕಾರಿ ಕನ್ನಡ ಶಾಲೆಗಳ ಸುಧಾರಣೆ: ಸರ್ಕಾರಿ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ ಸೇರಿ ಮೂಲಸೌಕರ್ಯಗಳನ್ನು ಕಲ್ಪಿಸಬೇಕು.
- ಶಿಕ್ಷಕರ ಹುದ್ದೆ ಭರ್ತಿ: ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು.
- ಸರೋಜಿನಿ ಮಹಿಷಿ ವರದಿ ಅನುಷ್ಠಾನ: ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸುವುದು. ಜೊತೆಗೆ, ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್ಗಳನ್ನು ಸರ್ಕಾರ ಎದುರಿಸುವುದು.
- ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
- ರಾಷ್ಟ್ರಕವಿ ಪ್ರಶಸ್ತಿ ಘೋಷಣೆ: ರಾಷ್ಟ್ರಕವಿ ಪ್ರಶಸ್ತಿಯನ್ನು ಘೋಷಿಸಬೇಕು.
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರು ಈ ವಿಷಯಗಳ ಗಂಭೀರತೆಯನ್ನು ಅರಿತು ಈ ಪ್ರಮುಖ ನಿರ್ಣಯಗಳ ಕುರಿತು ಚರ್ಚಿಸಲು ತಕ್ಷಣವೇ ಒಂದು ಸಭೆಯನ್ನು ಆಯೋಜಿಸುವುದರ ಜೊತೆಗೆ ಅವುಗಳನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಆದೇಶ ನೀಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಕೋರಿದ್ದಾರೆ.
BIG NEWS : ಕರ್ನಾಟಕದ ಮದರಸಾಗಳಲ್ಲಿ `ಕನ್ನಡ’ ಕಲಿಸಲು ಆದ್ಯತೆ : CM ಘೋಷಣೆ








