ನೋಯ್ಡಾ: ವೇತನ ಹೆಚ್ಚಳ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಾಗಿ ಒತ್ತಾಯಿಸಿ ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯು ಸೋಮವಾರ (ಏಪ್ರಿಲ್ 13, 2026) ಹಿಂಸಾಚಾರಕ್ಕೆ ತಿರುಗಿದೆ. ನೂರಾರು ಕಾರ್ಮಿಕರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಲ್ಲುತೂರಾಟ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗಳು ನಡೆದಿವೆ.
ಹರಿಯಾಣ ಸರ್ಕಾರವು ಇತ್ತೀಚೆಗೆ ಕನಿಷ್ಠ ವೇತನವನ್ನು ಏರಿಕೆ ಮಾಡಿರುವುದನ್ನು ಗಮನಿಸಿದ ನೋಯ್ಡಾದ ಕಾರ್ಮಿಕರು, ತಮಗೂ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿ ಈ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು.
ನೋಯ್ಡಾದ ಫೇಸ್-2 (Phase-2) ಮತ್ತು ಸೆಕ್ಟರ್ 60 ರ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ ತೀವ್ರಗೊಂಡಿತು. ಉದ್ರಿಕ್ತ ಗುಂಪು ವಾಹನಗಳ ಗಾಜುಗಳನ್ನು ಪುಡಿಮಾಡಿದ್ದಲ್ಲದೆ, ಒಂದು ಕಾರಿಗೆ ಬೆಂಕಿ ಹಚ್ಚಿದೆ. ಕಂಪನಿಗಳ ಆವರಣಕ್ಕೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.ಒಂದೆಡೆ ಕೇಂದ್ರ ಕಾರ್ಮಿಕ ಸಂಘಟನೆಗಳು ಸರ್ಕಾರದೊಂದಿಗೆ ಕನಿಷ್ಠ ವೇತನದ ಕುರಿತು ಮಾತುಕತೆ ನಡೆಸುತ್ತಿದ್ದರೂ, ಸ್ಥಳೀಯ ಕಾರ್ಮಿಕರು ತಾಳ್ಮೆ ಕಳೆದುಕೊಂಡು ಬೀದಿಗಿಳಿದಿರುವುದು ಆತಂಕಕ್ಕೆ ಕಾರಣವಾಗಿದೆ. ಸುಮಾರು 40,000 ಕಾರ್ಮಿಕರು ವಿವಿಧ ಸ್ಥಳಗಳಲ್ಲಿ ಜಮಾಯಿಸಿದ್ದರು ಎಂದು ಅಂದಾಜಿಸಲಾಗಿದೆ.
ನೋಯ್ಡಾದಲ್ಲಿನ ಹಿಂಸಾಚಾರದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕೂಡ ಹೈ ಅಲರ್ಟ್ ಘೋಷಿಸಿದ್ದಾರೆ. ದೆಹಲಿ-ನೋಯ್ಡಾ ಗಡಿಯಲ್ಲಿ ವಾಹನಗಳ ತಪಾಸಣೆ ಚುರುಕುಗೊಳಿಸಲಾಗಿದ್ದು, ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.








