ಮಂಡ್ಯ : ತಾಲೂಕಿನ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಹೆಚ್ಚಿನ ವಿದ್ಯಾಭ್ಯಾಸ ಕಲ್ಪಿಸಬೇಕೆಂಬ ಉದ್ದೇಶದಿಂದ ಮದ್ದೂರು ನಗರದಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.
ಮದ್ದೂರು ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಪದವಿ ಪ್ರಧಾನ ಸಮಾರಂಭ ಮತ್ತು ಸಂಶೋಧನಾ ಕೇಂದ್ರ ಹಾಗೂ ಪಿಎಂ – ಉಷಾ ಯೋಜನೆಯಡಿ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸ್ನಾತಕೋತ್ತರ ಪದವಿ ಪಡೆದ ಬಳಿಕ ಸ್ನಾತಕೋತ್ತರ ಸಂಶೋಧನಾ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಈ ಹಿಂದೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ವಿದ್ಯಾರ್ಥಿಗಳು ಸ್ಥಳೀಯವಾಗಿಯೇ ಉನ್ನತ ವ್ಯಾಸಂಗ ಮಾಡಬೇಕೆಂಬ ಉದ್ದೇಶದಿಂದ ಸ್ನಾತಕೋತ್ತರ ಪದವಿ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದ್ದು, ಹೀಗಾಗಿ ಕಾಲೇಜಿನಲ್ಲಿ ಈ ಬಾರಿ ಶೇ.100 ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಪದವಿ ಶಿಕ್ಷಣ ಜೊತೆಗೆ ಕಂಪ್ಯೂಟರ್ ಶಿಕ್ಷಣವನ್ನು ಕಲಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ಪದವಿ, ಹುದ್ದೆ, ಸ್ಥಾನಮಾನವನ್ನು ಪಡೆಯಬಹುದು ಆದರೆ, ವಿದ್ಯಾರ್ಥಿ ಜೀವನಕ್ಕೆ ಮತ್ತೆ ಮರಳಲು ಸಾಧ್ಯವಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುವ ಮೂಲಕ ಉನ್ನತ ಸ್ಥಾನಕ್ಕೆ ಏರಬೇಕೆಂದು ಕಿವಿ ಮಾತು ಹೇಳಿದರು.
ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಈಗಾಗಲೇ 8 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಕಾಲೇಜಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿನಿಯರು ಒಪ್ಪಿಗೆ ಸೂಚಿಸಿದರೆ ಮುಂದಿನ ದಿನಗಳಲ್ಲಿ ಕೋ-ಎಡ್ ಎಜುಕೇಷನ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಮಂಡ್ಯ ವಿಶ್ವ ವಿದ್ಯಾಲಯದ ಕುಲಪತಿ ಪ್ರೋ.ಕೆ.ಶಿವಚಿತ್ತಪ್ಪ, ಪ್ರಾಂಶುಪಾಲ ಪ್ರೋ.ಕೆ.ಬಿ.ನಾರಾಯಣ್, ಸ್ನಾತಕೋತ್ತರ ವಿಭಾಗಗಳ ಸಂಯೋಜಕ ಡಾ.ಕೆ.ಸಿದ್ದರಾಜು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ಬಿ.ಮಹಾಲಿಂಗಯ್ಯ, ಸದಸ್ಯರಾದ ಜಯಂತಿ ಲಾಲ್ ಪಟೇಲ್, ಬಿಂದು ಶ್ರೀ, ದಾಸೇಗೌಡ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಸಾಗರದ ಗಣಪತಿ ಅರ್ಬನ್ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷೆಯಾಗಿ ಸರಸ್ವತಿ ನಾಗರಾಜ್ ಆಯ್ಕೆ
GOOD NEWS: ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್ಸ್ಟೆಬಲ್ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್








