ಬೆಂಗಳೂರು: 2025–26ನೇ ಹಣಕಾಸು ವರ್ಷಕ್ಕೆ ಕರ್ನಾಟಕ ರಾಜ್ಯಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಜಿಎನ್ಆರ್ಇಜಿಎಸ್) ಅಡಿ ಹಣ ಬಿಡುಗಡೆಯಲ್ಲಿ ಮುಂದುವರೆದ ವಿಳಂಬದ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವವರಿಗೆ ಪತ್ರ ಬರೆದಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯ ಭದ್ರತೆಯನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುವ ಈ ಮಹತ್ವದ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ದೃಢವಾಗಿ ಬದ್ಧವಾಗಿದೆ, ಯೋಜನೆಯ ಅವಶ್ಯಕತೆಗಳಿಗೆ ಅನುಗುಣವಾಗಿ, ರಾಜ್ಯದ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯವು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಅಗತ್ಯವಿರುವ ಎಲ್ಲಾ ಬಳಕೆಯ ಪ್ರಮಾಣಪತ್ರಗಳು ಮತ್ತು ದಾಖಲೆಗಳನ್ನು ಸಲ್ಲಿಸಿದಾಗ್ಯೂ, ಹಣವನ್ನು ಬಿಡುಗಡೆ ಮಾಡದ ಕಾರಣ ರಾಜ್ಯವು ಪ್ರಸ್ತುತ ತೀವ್ರ ಆರ್ಥಿಕ ಮತ್ತು ಆಡಳಿತಾತ್ಮಕ ನಿರ್ಬಂಧಗಳನ್ನು ಎದುರಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ವಿವರಿಸಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಯಾವುದೇ ಸಾಮಗ್ರಿ ಹಾಗೂ ನಿಧಿಗಳನ್ನು ಬಿಡುಗಡೆ ಮಾಡಲಾಗಿಲ್ಲ, ಇದರ ಪರಿಣಾಮವಾಗಿ 787.20 ಕೋಟಿ ರೂ. ಮೊತ್ತದ ಬಿಲ್ಗಳು ಬಾಕಿ ಉಳಿದಿವೆ, ಇದರೊಂದಿಗೆ ಸುಮಾರು 600 ಕೋಟಿ ರೂ. ವೇತನ ಹೊಣೆಗಾರಿಕೆಗಳು ಬಾಕಿ ಇವೆ ಎಂದು ಪತ್ರದಲ್ಲಿ ತಿಳಿಸಿರುವ ಸಚಿವರು ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಬಾಕಿ ಇರುವ ವೇತನ, ಸಾಮಗ್ರಿ ಮತ್ತು ಆಡಳಿತಾತ್ಮಕ ನಿಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.
ಲಕ್ಷಾಂತರ ಗ್ರಾಮೀಣ ಕಾರ್ಮಿಕರ ಜೀವನೋಪಾಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮಾತ್ರವಲ್ಲದೆ, ಈ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಆಡಳಿತಾತ್ಮಕ ಪರಿಣಾಮಕಾರಿತ್ವ ಮತ್ತು ನಂಬಿಕೆಯನ್ನು ಕಾಪಾಡಿಕೊಳ್ಳಲು ಸಮಯೋಚಿತ ವಿತರಣೆ ಅತ್ಯಗತ್ಯವಾಗಿದೆ ಎಂದು ಸಚಿವ ಪ್ರಿಯಾಂಕ್ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಿಳಿಸಿದ್ದು, ಕೇಂದ್ರ ಸಚಿವರ ಬೆಂಬಲ ಮತ್ತು ಆರಂಭಿಕ ಪರಿಹಾರವನ್ನು ಪ್ರಾಮಾಣಿಕವಾಗಿ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.