ಮಂಡ್ಯ : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ ಜೊತೆಗೆ ಲೋಕ್ ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಬಗೆಹರಿಸಲಾಗುವುದೆಂದು ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ ಸೋಮವಾರ ಹೇಳಿದರು.
ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ತಿಂಗಳಿಗೆ ರಾಜ್ಯದ 3 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು. ಅದಾಲತ್ ಮಾದರಿಯಲ್ಲಿ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಜಿಲ್ಲಾ ಹಂತದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಹೀಗಾಗಿ ಆಯೋಗಕ್ಕೆ ಬಂದು ಅರ್ಜಿ ಸಲ್ಲಿಸಿರುವವರು ಮತ್ತೆ ಭೇಟಿ ನೀಡುವ ಅಗತ್ಯವಿಲ್ಲ. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ದೌರ್ಜನ್ಯಕ್ಕೆ ಒಳಗಾದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ಪ್ರಕರಣ ದಾಖಲಿಸಬಹುದು. ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರಲಿದ್ದು, ನೊಂದವರಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲಾಗುವುದು ಎಂದರು.
ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಾಗಿ ಕಂದಾಯ, ದೌರ್ಜನ್ಯ, ಖಾತೆ, ಪಹಣಿ, ಸ್ಮಶಾನದ ವಿಚಾರಗಳ ಕುರಿತಾಗಿ ಪ್ರಕರಣಗಳು ದಾಖಲಾಗಿದ್ದು, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವ ಕ್ರಮ ಕೈಗೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿತ್ತು. ಹೀಗಾಗಿ ಹಲವು ಪ್ರಕರಣಗಳು ಇತ್ಯರ್ಥವಾಗಿದ್ದು, ಮದ್ದೂರು ತಾಲೂಕಿನ ಬಾಕಿ ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ಬಗೆಹರಿಸಲು ಅಧಿಕಾರಿಗಳಿಗೆ ಗಡುವು ನೀಡಲಾಗಿದ್ದು, ಮುಖ್ಯವಾಗಿ ವಿವಿಧ ಇಲಾಖೆಗಳಿಗೆ ಮೀಸಲಾಗಿರುವ ಎಸ್ಸಿಪಿ, ಟಿಎಸ್ಪಿ ಹಣ ಸರಿಯಾಗಿ ಬಳಕೆಯಾಗಬೇಕು. ಆದರೆ, ಕೆಲವು ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ ಎಂದು ದೂರುಗಳು ಕೇಳಿ ಬರುತ್ತಿವೆ. ಅಂತಹ ಅಧಿಕಾರಿಗಳ ವಿರುದ್ದ ಆಯೋಗ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈಗಾಗಲೇ ಆಯೋಗಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜಿಲ್ಲಾ ಹಾಗೂ ತಾಲೂಕಗಳನ್ನಾಗಿ ವಿಂಗಡಣೆ ಮಾಡಲಾಗಿದ್ದು, ಅವುಗಳನ್ನು ತಹಶೀಲ್ದಾರ್ ಮೂಲಕ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳಿಗೆ ವರ್ಗಾಯಿಸಿ ಶೀಘ್ರವಾಗಿ ಸಮಸ್ಯೆಗಳನ್ನು ಪರಿಹರಿಸಲಾಗುವುದು.
ನಾನು ಆಯೋಗದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಆಯೋಗದಲ್ಲಿ 4800 ಪ್ರಕರಣಗಳು ಬಾಕಿ ಉಳಿದಿವೆ. ಈಗಾಗಲೇ ಒಂದುವರೇ ತಿಂಗಳಲ್ಲಿ 206 ಪ್ರಕರಣಗಳು ದಾಖಲಾಗಿ 6 ಬಾರಿ ನ್ಯಾಯಾಲಯದ ಕಲಾಪ ನಡೆಸಿ 70 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.
ಇಂದಿನ ಭೇಟಿ ವೇಳೆ ಮದ್ದೂರು ತಾಲೂಕಿನಿಂದ 26 ಅರ್ಜಿಗಳು ಬಂದಿದ್ದು, ಒಂದು ತಿಂಗಳೊಳಗೆ ಸಂಬಂಧ ಪಟ್ಟ ಅಧಿಕಾರಿಗಳು ಕಾರ್ಯೋನ್ಮುಖವಾಗಿ ಕೆಲಸ ಮಾಡಿ ವರದಿ ಸಲ್ಲಿಸಬೇಕು. ಮತ್ತೆ ಒಂದು ತಿಂಗಳ ಬಳಿಕ ಮದ್ದೂರು ತಾಲೂಕಿಗೆ ಭೇಟಿ ನೀಡಲಿದ್ದು, ಅಷ್ಟರಲ್ಲಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಓ ರಾಮಲಿಂಗಯ್ಯ, ಡಿವೈಎಸ್ಪಿ ಯಶವಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ಬಿಇಓ ಧನಂಜಯ, ಸರ್ಕಲ್ ಇನ್ಸ್ಪೆಕ್ಟರ್ ನವೀನ್, ಟಿಎಚ್ಓ ಡಾ. ರವಿಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಯುವನಿಧಿ ಯೋಜನೆ: ರಾಜ್ಯ ಸರ್ಕಾರದಿಂದ 2.84 ಲಕ್ಷ ಮಂದಿಗೆ 757 ಕೋಟಿ ಆರ್ಥಿಕ ನೆರವು ಬಿಡುಗಡೆ
ALERT : ನಿಮ್ಮ `ಮನೆಯಲ್ಲಿ `ಇನ್ವರ್ಟರ್’ ಬಳಸುತ್ತೀರಾ? ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.!








