ಬೆಂಗಳೂರು : ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲದಿದ್ದರೂ, ಪೊಲೀಸರು ಬಂಧಿಸುತ್ತಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಬೆಳವಣಿಗೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಅತ್ಯಾಚಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಹೊಕ್ಕಳ್ಳಿ ಗ್ರಾಮದ ನಿವಾಸಿ ಎಚ್.ಜಿ. ಗಂಗ (29) ಎಂಬಾತ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೊಲೀಸರ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿತು.
ವಿಚಾರಣೆ ವೇಳೆ ಆರೋಪಿ ಪರ ವಕೀಲರು ವಾದ ಮಂಡಿಸಿ, ಪ್ರಕರಣ ಸಂಬಂಧ ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೂರು ದಾಖಲಿಸುವಲ್ಲಿ ದೂರುದಾರೆ 1 ವರ್ಷ 3 ತಿಂಗಳು ವಿಳಂಬ ಮಾಡಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಆರೋಪಿಯನ್ನು ಏಕೆ ಬಂಧಿಸಲಾಗಿದೆ ಎಂಬ ನ್ಯಾಯಪೀಠದ ಪ್ರಶ್ನೆಗೆ ಉತ್ತರಿಸಿದ ವಕೀಲರು, ಅರ್ಜಿದಾರ ತಲೆಮರೆಸಿಕೊಂಡಿದ್ದರು. ಈಗ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಆಗ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿ*ಕ ಕ್ರಿಯೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಇಂಥ ಪ್ರಕರಣದಲ್ಲಿ ಆರೋಪಿಗಳನ್ನು ಪೊಲೀಸರು ಏಕೆ ಬಂಧಿಸುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ.
ಆರೋಪಿಯನ್ನು ಬಂಧಿಸುವುದು ಕಡ್ಡಾಯವೇನಿಲ್ಲ. 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂಬ ಕಾರಣಕ್ಕೆ ಬಂಧಿಸಲಾಗುತ್ತಿದೆ. ಇಂಥ ಪ್ರಕರಣ ಎದುರಿಸುತ್ತಿರುವ ಎಲ್ಲ ಆರೋಪಿಗಳು ಜೈಲಿನೊಳಗಿದ್ದಾರೆ. ಬಂಧನ ಮಾಡಬಾರದು ಎಂದು ಕೋರ್ಟ್ ಹೇಳುತ್ತಲೇ ಇದೆ. ಪೊಲೀಸರು ಮಾತ್ರ ಬಂಧನ ಮಾಡುತ್ತಲೇ ಇದ್ದಾರೆ ಎಂದು ಖಾರವಾಗಿ ನುಡಿದರು.
ಪ್ರಕರಣದಲ್ಲಿ ಅರ್ಜಿದಾರ ಆರೋಪಿ, ದೂರುದಾರೆಯೊಂದಿಗೆ ಎರಡೂವರೆ ವರ್ಷ ಸಂಬಂಧ ಹೊಂದಿದ್ದರು. ಕಾನೂನು ದುರ್ಬಳಕೆಗೆ ಈ ಪ್ರಕರಣ ಮತ್ತೊಂದು ಸ್ಪಷ್ಟ ಉದಾಹರಣೆ. ಈ ಅಪರಾಧ ಸಂಬಂಧ ಜಾರಿಗೆ ಬಂದಿರುವ ಹೊಸ ನಿಯಮ ಬಿಎನ್ಎಸ್ ಸೆಕ್ಷನ್ 69 ಅನ್ನು ಸಹ ದುರುಪಯೋಗ ಮಾಡಲಾಗುತ್ತಿದೆ. ಇಂತಹ ಬೆಳವಣಿಗೆ ತಡೆಯಲು ಏನಾದರೂ ಮಾಡಬೇಕು ಎಂದು ಸರ್ಕಾರಿ ಅಭಿಯೋಜಕರಿಗೆ ನ್ಯಾಯಪೀಠ ಸೂಚಿಸಿತು.








