ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿಂದ ಗುರುವಾರ ರಾಜಾಂಗಣದಲ್ಲಿ ಸಾರ್ವಜನಿಕ ದರ್ಬಾರ್ ನೆರವೇರಿತು. ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಇತರ ಮಠಗಳ ಶ್ರೀಗಳು ಗೈರಾಗುತ್ತಿದ್ದಾರೆ. ಇದರೊಂದಿಗೆ 2008ರ ಇತಿಹಾಸ ಪುನರಾವರ್ತನೆಯಾದಂತಾಗಿದೆ.
ಸಂಪ್ರದಾಯದಂತೆ ಮೊದಲು ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣ ಮಠದಲ್ಲಿ ಖಾಸಗಿ ದರ್ಬಾರ್ ನಡೆಸಿದರು. ನಂತರ ಸಾರ್ವಜನಿಕ ದರ್ಬಾರ್ನಲ್ಲಿ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಭಾಗಿಯಾದರು.
ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರ ಸಾರ್ವಜನಿಕ ಪರ್ಯಾಯ ದರ್ಬಾರ್ನಲ್ಲಿ ಅನೇಕ ರಾಜಕೀಯ ಮುಖಂಡರೂ ಭಾಗವಹಿಸಿದರು. ಇದಕ್ಕೂ ಮುನ್ನ ನಡೆದ ಮೆರವಣಿಗೆಯಲ್ಲಿ ಅಯೋಧ್ಯೆಯ ರಾಮಮಂದಿರ ನಿರ್ಮಾಣವನ್ನು ಸಂಕೇತಿಸುವ ಟ್ಯಾಬ್ಲೋ ಸೇರಿದಂತೆ ಹತ್ತಾರು ಟ್ಯಾಬ್ಲೋಗಳು ಗಮನ ಸೆಳೆದವು.
2008 ರಲ್ಲಿ ಕೂಡ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ವಿರೋಧ ವ್ಯಕ್ತವಾಗಿತ್ತು. ಆ ಸಂದರ್ಭ ಅಂದಿನ ಶೀರೂರು ಶ್ರೀಗಳು ಅವರ ಜೊತೆ ನಿಂತಿದ್ದರು. ಉಳಿದ 6 ಮಠಗಳ ಶ್ರೀಗಳು ಪರ್ಯಾಯದಿಂದ ದೂರ ಉಳಿದಿದ್ದರು.ಸ್ಪೀಕರ್ ಯು.ಟಿ ಖಾದರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ರಾಜಕೀಯ ನಾಯಕರ ಜತೆ ಸ್ಥಳೀಯ ಶಾಸಕರೂ ಭಾಗಿಯಾದರು.