ಬೆಂಗಳೂರು : “ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ”ಎಂದರು.
ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ ನಾಯಕರು.
ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ನಿಮ್ಮ ಆಪ್ತರ ಬಯಕೆಯನ್ನು ರಾಹುಲ್ ಗಾಂಧಿ ಅವರ ಬಳಿ ಹೇಳಿಕೊಳ್ಳುತ್ತೀರಾ ಪ್ರಸ್ತಾಪ ಮಾಡುತ್ತೀರಾ ಎಂದು ಕೇಳಿದಾಗ, “ನಿಮ್ಮ (ಮಾಧ್ಯಮಗಳ) ಬಯಕೆಯನ್ನು ಅವರ ಮುಂದೆ ಪ್ರಸ್ತಾಪಿಸುತ್ತೇನೆ” ಎಂದು ತಿಳಿಸಿದರು.
ನನ್ನ ಟ್ವೀಟ್ ಬೇರೆ ರೀತಿ ವ್ಯಾಖ್ಯಾನ ಮಾಡುವುದರಲ್ಲಿ ಅರ್ಥವಿಲ್ಲ
“ಕರ್ನಾಟಕ ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಟ್ವೀಟ್ ಮಾಡಿದ್ದನ್ನು ಕೆಲವು ಮಾಧ್ಯಮಗಳು ವಿವಿಧ ರೀತಿ ವ್ಯಾಖ್ಯಾನ ಮಾಡುತ್ತಿವೆ. ಕಾವೇರಿ ಆರತಿಯ ಪ್ರಾರ್ಥನೆಗೆ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಮೇಕೆದಾಟು ಯೋಜನೆ ತಾಂತ್ರಿಕ ಅಂಶವನ್ನು ಕೇಂದ್ರ ಜಲ ಆಯೋಗವೇ ತೀರ್ಮಾನ ಮಾಡಬೇಕು ಎಂದು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ಈ ಮಾತನ್ನು ಹೇಳುತ್ತಾ ಬಂದಿದ್ದೇನೆ. ಇದನ್ನು ಬೇರೆ ರೀತಿ ವ್ಯಾಖ್ಯಾನ ಮಾಡಿದರೆ ಅರ್ಥವಿಲ್ಲ” ಎಂದು ತಿಳಿಸಿದರು.
ಸಾಗರದ ‘ಚೋರಡಿ ಅರಣ್ಯಾಧಿಕಾರಿ’ಗಳ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಕಡಿತಲೆ ಮಾಡಿದ್ದ ‘ಸಾಗುವಾನಿ ಮರ’ ವಶಕ್ಕೆ








