ನವದೆಹಲಿ : ಹಣದುಬ್ಬರ, ಬೆಲೆ ಏರಿಕೆ, ಜಿಎಸ್‌ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್​ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಶಶಿ ತರೂರ್ ಸೇರಿದಂತೆ ಹಲವು ಸಂಸದರನ್ನು ಪೊಲೀಸರು ನವದೆಹಲಿಯ ವಿಜಯ್ ಚೌಕ್‌ನಲ್ಲಿ ಬಂಧಿಸಿದ್ದಾರೆ.

ಬೆಲೆ ಏರಿಕೆ, ಜಿಎಸ್‌ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್​ ನಾಯಕರು, ಸಂಸದರರು ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಸಹ ಕಾಂಗ್ರೆಸ್​ ಮೆರವಣಿಗೆಯನ್ನು ಮುಂದವರೆಸಿದೆ.

ಇತ್ತ ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ವಿಜಯ್ ಚೌಕ್ ರಸ್ತೆ ಮತ್ತು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್‌ಗಳ ಮೂಲಕ ನಿರ್ಬಂಧಿಸಿದ್ದಾರೆ. ಕಾಂಗ್ರೆಸ್ ಸಂಸದರ ಪ್ರತಿಭಟನೆಯನ್ನು ತಡೆಯಲು ಬ್ಯಾರಿಕೇಡ್‌ಗಳ ಇನ್ನೊಂದು ಬದಿಯಲ್ಲಿ ಮಹಿಳಾ ಪ್ಯಾರಾ ಸಿಬ್ಬಂದಿಗಳು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಪ್ರಧಾನಿ ಭವನವನ್ನು ಘೇರಾವ್ ಮಾಡಲು ಕೂಡ ಯೋಜಿಸಿದ್ದಾರೆ. ಇದೇ ವೇಳೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಈಗ ಪ್ರಜಾಪ್ರಭುತ್ವ ಇಲ್ಲ, ನಮ್ಮ ದೇಶ ನಾಲ್ಕು ಜನರ ಸರ್ವಾಧಿಕಾರದಲ್ಲಿದೆ ಎಂದು ವಾಗ್ದಾಳಿ ನಡೆಸಿದ್ದರು.

Share.
Exit mobile version