ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಆರೆಂಜ್’ ಹಾಗೂ ‘ಯೆಲ್ಲೋ’ ಅಲರ್ಟ್ ಘೋಷಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರು, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ಎಲ್ಲೆಲ್ಲಿ ಮಳೆಯಾಗಿದೆ?
ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಮುಖ್ಯವಾಗಿ ತುಮಕೂರಿನ ವೈ.ಎನ್. ಹೊಸಕೋಟೆಯಲ್ಲಿ ಭಾರಿ ಮಳೆಯಾಗಿದೆ. ಉಳಿದಂತೆ ದಾವಣಗೆರೆ, ಜಗಳೂರು, ಚಾಮರಾಜನಗರ, ನಾಯಕನಹಟ್ಟಿ, ಚಿಕ್ಕಬಳ್ಳಾಪುರ, ಮದ್ದೂರು, ಸಿಂದಗಿ, ಮುನಿರಾಬಾದ್, ಚಿತ್ರದುರ್ಗ, ಎಂ.ಎಂ. ಹಿಲ್ಸ್, ಭರಮಸಾಗರ, ಶಕ್ತಿನಗರ, ಶಿರಾ, ಕುರ್ಡಿ, ಕಂಪ್ಲಿ, ಮಧುಗಿರಿ, ಪರಶುರಾಂಪುರ, ಹಿರಿಯೂರು, ಮುದ್ದೇಬಿಹಾಳ, ಗಂಗಾವತಿ, ಹೊಸಕೋಟೆ, ವಿಜಯಪುರ, ಮಂಗಳೂರು ಹಾಗೂ ಕೋಟ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳು ಮಳೆ ಮತ್ತಷ್ಟು ಚುರುಕಾಗಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.








