ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಗುಡುಗು ಸಹಿತ ಸುರಿದ ಮಳೆಗೆ ಇಬ್ಬರು ಬಲಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ.
ಸೋಮವಾರ ರಾಜ್ಯದ ಕೊಪ್ಪಳ, ಗದಗ, ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಪ್ರಕೃತಿ ವಿಕೋಪಕ್ಕೆ ಇಬ್ಬರು ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಿ. ಬೆಂಚಮಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದೇವರಾಯನಗೌಡ ಪಾಟೀಲ (50) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಅಡಿಕೆ ತೋಟದ ಮನೆಗೆ ಹಾಕಿದ್ದ ಹಂಚುಗಳು ಹಾರಿ ಹೋಗಿವೆ. ಇದನ್ನು ಕಂಡು ಗಾಬರಿಗೊಂಡ ಆರ್. ಲೋಕೇಶ (52) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆಯ ಹಳೆ ಕೆರೆ ಎಂಬಲ್ಲಿ ಸಿಡಿಲು ಬಡಿದು 8 ಕುರಿಗಳು ಹಾಗೂ 3 ಕುರಿಮರಿಗಳು ಮೃತಪಟ್ಟಿವೆ. ಗದಗ ಜಿಲ್ಲೆಯ ಮುಂಡರಗಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಖಾಸಗಿ ಕಂಪನಿಯ ಮೊಬೈಲ್ ಟವರ್ ಕಂಬ ಮುರಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾವಿರಾರು ಅಡಿಕೆ ಮರಗಳು ನೆಲಸಮವಾಗಿವೆ.
ಕಳೆದ ಕೆಲವು ದಿನಗಳಿಂದ ದಾಖಲೆ ಮಟ್ಟದ ತಾಪಮಾನದಿಂದ ಬೆಂದಿರುವ ಬೆಂಗಳೂರಿಗೆ ಹವಾಮಾನ ಇಲಾಖೆ ಸಮಾಧಾನದ ಸುದ್ದಿ ನೀಡಿದೆ. ಏಪ್ರಿಲ್ 28 ರಿಂದ ಮೇ 1 ರವರೆಗೆ ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಮಳೆಯ ಮುನ್ಸೂಚನೆ ಇದ್ದರೂ ನಗರದಲ್ಲಿ ಬಿಸಿಲಿನ ತಾಪ ಮುಂದುವರಿದಿದೆ. ಭಾನುವಾರ ನಗರದ ಗರಿಷ್ಠ ತಾಪಮಾನ 36.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38.2 ಡಿಗ್ರಿ ಮತ್ತು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇರುವುದರಿಂದ ನಗರದ ಉಷ್ಣಾಂಶದಲ್ಲಿ ತುಸು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








