ಬೆಂಗಳೂರು : ಬೇಸಿಗೆ ಕಾಲವಾಗಿರುವುದರಿಂದ, ರಾಜ್ಯದಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಸೂಚಿಸಿದೆ.

ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು.

ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುವುದು ಮತ್ತು ಸಾರ್ವಜನಿಕರಿಗೆ ಶುದ್ದವಾದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮವಹಿಸುವುದು.

ಎಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪರೀಕ್ಷೆ ನಡೆಸಿದ ನೀರಿನ ಮೂಲಗಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಯೋಗಶಾಲೆಯಲ್ಲಿ ನಿರ್ವಹಣೆ ಮಾಡುವುದು. ಕುಡಿಯಲು ಯೋಗ್ಯವಲ್ಲವೆಂದು ಧೃಢಪಟ್ಟ ನೀರಿನ ಮೂಲಗಳನ್ನು ಕೂಡಲೇ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರದೊಂದಿಗೆ ಸ್ವಚ್ಚಗೊಳಿಸಿ ಕ್ಲೋರಿನೇಷನ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕ್ರಮವಹಿಸುವುದು.

ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಹೋಗಿದ್ದರೆ ತಕ್ಷಣ ಸಂಬಂದಪಟ್ಟ ನಗರ ಪಾಲಿಕೆ, ಪಟ್ಟಣ ಪಂಚಾಯತ್, ಪುರಸಭೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳುವುದು ಮತ್ತು ವಾಟರ್ ಮ್ಯಾನ್‍ರವರಿಗೆ ಕ್ಲೋರಿನೇಷನ್ ಮಾರ್ಗಸೂಚಿಯನ್ನು ಆರೋಗ್ಯ ಇಲಾಖಾ ವತಿಯಿಂದ ನೀಡುವುದು.

ಸ್ಥಳೀಯ ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್ ಮತ್ತು ಅಂಗಡಿಗಳ ತಪಾಸಣೆ ನಡೆಸಿ ಆಹಾರ ಮತ್ತು ನೀರಿನ ಗುಣಮಟ್ಟದ ಸುರಕ್ಷತೆಯ ಬಗ್ಗೆ ಕ್ರಮವಹಿಸುವುದು. ಮನೆ ಬೇಟಿ ಸಮೀಕ್ಷೆಯಲ್ಲಿ ವೈಯಕ್ತಿಕ ಶುಚಿತ್ವ, ಪರಿಸರ ನೈರ್ಮಲ್ಯ, ಶುದ್ದ ಕುಡಿಯುವ ನೀರು, ಬಿಸಿಯಾದ ಆಹಾರ ಸೇವನೆ, ರಸ್ತೆ/ಬೀದಿ ಬದಿಯಲ್ಲಿ ಕತ್ತರಿಸಿ ಮಾರಾಟ ಮಾಡುವ ಹಣ್ಣು-ಹಂಪಲುಗಳನ್ನು ತೆರೆದ ಆಹಾರ ಪದಾರ್ಥಗಳನ್ನು ಸೇವಿಸದಂತೆ ಸಾರ್ವಜನಿಕರು ಎಚ್ಚರ ವಹಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಕೆಮ್ಮುವಾಗ ಮತ್ತು ಸೀನುವಾಗ ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಸೂಕ್ತ ಚಿಕಿತ್ಸೆಗಾಗಿ ಅಗತ್ಯವಾದ ಜೀವರಕ್ಷಕ ಔಷಧಿಗಳು ಹಾಗೂ ಕ್ರಿಮಿ-ಕೀಟನಾಶಕಗಳನ್ನು ಎಲ್ಲಾ ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಭ್ಯವಿರುವಂತೆ ಕ್ರಮ ಕೈಗೊಳ್ಳುವುದು.

ಜಾತ್ರೆ, ಊರುಸ್ ಹಾಗೂ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ಮಾಹಿತಿ, ವಸ್ತು ಮಾಹಿತಿ, ಶಿಕ್ಷಣ ಸಂವಹನ ಪ್ರದರ್ಶನ ಏರ್ಪಡಿಸಿ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಶಿಕ್ಷಣ ನೀಡುವುದು. ನಿರ್ದಿಷ್ಟವಾದ ರೋಗ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗದಂತೆ ಜಾಗ್ರತೆವಹಿಸಿ, ಸಾರ್ವಜನಿಕರು ಇದಕ್ಕೆ ಸಂಬಂಧಪಟ್ಟ ಇಲಾಖೆಯವರಿಗೆ ಸೂಕ್ತ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.

Share.
Exit mobile version