ಬೆಂಗಳೂರು : ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಸಂಬಂಧಿಸಿದಂತೆ 50 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಈ ವಿಷಯ ತಿಳಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದು, ಕಾಮಗಾರಿ ಭರದಿಂದ ಸಾಗಿದೆ. ಗುತ್ತಿಗೆದಾರರಿಗೆ ಸುಮಾರು 73 ಕೋಟಿ ರೂ. ಹಣ ಪಾವತಿ ಆಗಬೇಕಿದ್ದು, ಈ ಪೈಕಿ ಇಂದು 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಾವು ಮಾಡಿದ ಮನವಿಯ ಮೇರೆಗೆ ಈಗ ಹಣ ಬಿಡುಗಡೆಯಾಗಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ಮುಂದಿನ ವರ್ಷ ಲೋಕಾರ್ಪಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
770 ಅಮರಗಣಂಗಳ ವಚನ:
ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ಭವ್ಯ, ದಿವ್ಯವಾಗಿ ನಿರ್ಮಾಣವಾಗುತ್ತಿದ್ದು, ಬಸವಾದಿ ಶರಣರ ಕೊಡುಗೆಯನ್ನು ಇಡೀ ವಿಶ್ವಕ್ಕೇ ಸಾರಲಿದೆ. ಇಷ್ಟಲಿಂಗ ಪೂಜೆಯ ವೈಜ್ಞಾನಿಕ ಅಂಶಗಳೂ ಇಲ್ಲಿದ್ದು, ಜಗತ್ತಿನಾದ್ಯಂತದ ಪ್ರವಾಸಿಗರನ್ನು ತನ್ನತ್ತ ಸೆಳೆಯಲಿದೆ ಎಂದರು.
ಆಧುನಿಕ ಅನುಭವ ಮಂಟಪದಲ್ಲಿರುವ 770 ಕಂಬಗಳ ಮೇಲೆ 770 ಅಮರ ಗಣಂಗಳ ವಚನಗಳನ್ನು ಕೆತ್ತಲಾಗಿದೆ ಎಂದ ಈಶ್ವರ ಖಂಡ್ರೆ, ಕಾಮಗಾರಿಗಾಗಿ ಅಗತ್ಯ ಹಣ ಬಿಡುಗಡೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಅರ್ಪಿಸಿದರು.
ಚಿಕ್ಕ ವಯಸ್ಸಿನಿಂದಲೇ ಶಾಲಾ ಹಂತದಲ್ಲಿ ಲೈಂಗಿಕ ಶಿಕ್ಷಣ ಸೇರಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್: ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ