ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70 ಭಾಗ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ. 67.5 ಪ್ರಗತಿ ಸಾಧಿಸಲಾಗಿದೆ. 2528 ಕಾಮಗಾರಿಗಳಲ್ಲಿ 1707 ಕಾಮಗಾರಿ ಪೂರ್ಣಗೊಂಡಿದ್ದು, 821 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಸಚಿವರು, ಶಿಕಾರಿಪುರ-ಸೊರಬ- ಆನವಟ್ಟಿ ಸೇರಿ 154 ಗ್ರಾಮಗಳಿಗೆ ನೀರು ನೀಡುವ ಬಹುಗ್ರಾಮ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬಹುಗ್ರಾಮ ಮತ್ತು ಇತರೆ ಯೋಜನೆಗಳಿಗೆ ಒಳಪಡದ ಗ್ರಾಮಗಳನ್ನು ಸಹ ಗುರುತಿಸಿ ನೀರು ಕೊಡಲು ವ್ಯವಸ್ಥೆ ಮಾಡಬೇಕು. ಹಾಗೂ ಕುಂಸಿ ಬಹು ಗ್ರಾಮ ಯೋಜನೆಯನ್ನು ಕೈಗೆತ್ತಿಕೊಂಡು ಕಾರ್ಯಾರಂಭಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಎಷ್ಟು ಶಾಲೆಗಳು, ಪಿಹೆಚ್ಸಿಗಳು ಮತ್ತು ಅಂಗನವಾಡಿಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಇದೆ ಮತ್ತು ಇಲ್ಲವೆಂದು ಡಿಡಿಪಿಐ, ಡಿಹೆಚ್ಓ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ವರದಿ ನೀಡಬೇಕು. ಕುಡಿಯುವ ನೀರಿನ ಸಂಪರ್ಕವಿಲ್ಲದ ಶಾಲೆಗಳು, ಅಂಗನವಾಡಿ ಮತ್ತು ಪಿಹೆಚ್ಸಿಗಳಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಸಂಪರ್ಕ ಒದಗಿಸಲಾಗುವುದು ಎಂದು ತಿಳಿಸಿದರು.
ಹಾಗೂ ಬಹುಮುಖ್ಯವಾಗಿ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಈಗಲೇ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಸದರಿ ಗ್ರಾಮಗಳಿಗೆ ನೀರು ಪೂರೈಸಲು ಅಗತ್ಯ ಅನುದಾನ ಮತ್ತು ಕ್ರಮಕ್ಕೆ ಯೋಜನೆ ರೂಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದ ಅವರು ಸಮಸ್ಯಾತ್ಮಕ ಹಳ್ಳಿಗಳ ಮತ್ತು ಅಂದಾಜು ಪಟ್ಟಿ ನೀಡಿದಲ್ಲಿ ತಾವು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದರು.
ಮೆಗ್ಗಾನ್ ಆಸ್ಪತ್ರೆಗೆ ಅಗತ್ಯವಾದ ಹೆಚ್ಚುವರಿ ನೀರಿಗಾಗಿ ಹೊಸ ಪೈಪ್ಲೈನ್ ಕೆಲಸ ಆಗಿದ್ದು, ನಗರ ಕುಡಿಯುವ ನೀರು ಮಂಡಳಿಯಿಂದ ಸಂಪರ್ಕ ನೀಡಿ ನೀರನ್ನು ನೀಡುವಂತೆ ಸೂಚಿಸಿದ ಸಚಿವರು ಒಂದು ವಾರದಲ್ಲೇ ಈ ವ್ಯವಸ್ಥೆ ಮಾಡಬೇಕು, ತಾವೇ ಇದಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.
ಆರೋಗ್ಯ ಇಲಾಖೆ : ಜಿಲ್ಲೆಯಲ್ಲಿ ಮುಖ್ಯವಾಗಿ ಮಲೆನಾಡು ಭಾಗದಲ್ಲಿ ಕೆಎಫ್ಡಿ ಪ್ರಕರಣಗಳು ಹೆಚ್ಚದಂತೆ ಜನರಲ್ಲಿ ಅರಿವು ಮೂಡಿಸಬೇಕು. ಕೆಎಫ್ಡಿ ಹರಡಲು ಕಾರಣವಾಗುವ ಉಣ್ಣಿಗಳು ಸಕ್ರಿಯವಾಗಿರುವ ಸಮಯದಲ್ಲಿ ಕಾಡಿಗೆ, ಹೊರಗೆ ಜನರು ಹೋಗದಂತೆ ತಿಳುವಳಿಕೆ ನೀಡಬೇಕು. ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣ ತಾವೇ ಚಿಕಿತ್ಸೆ ಮಾಡಿಕೊಳ್ಳದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳಬೇಕೆಂದು ತಿಳಿಸಿದರು.
ಡಿಹೆಚ್ಓ ಡಾ.ನಟರಾಜ್ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 1252 ಕೆಎಫ್ಡಿ ಸ್ಯಾಂಪಲ್ ಪರೀಕ್ಷೆ ಮಾಡಲಾಗಿದೆ. ಈವರೆಗೆ 12 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು ಎಲ್ಲ ಪ್ರಕರಣಗಳು ತೀರ್ಥಹಳ್ಳಿ ತಾಲ್ಲೂಕಿನಲ್ಲಿವೆ. ಹೆದ್ದೂರನ್ನು ಹಾಟ್ಸ್ಟಾಟ್ ಎಂದು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಮಂಗನ ಸಾವು ಕಂಡು ಬಂದಲ್ಲಿ ಅರಣ್ಯ ಇಲಾಖೆಯವರು ವರದಿ ಮಾಡುತ್ತಾರೆ. ಆ ಭಾಗಕ್ಕೆ ಜನರು ತೆರಳದಂತೆ ನಿರ್ಬಂಧ ವಿಧಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಡಿಎಸ್ಓ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ನವೆಂಬರ್ ಮಾಹೆಯಿಂದಲೇ ಉಣ್ಣಿ, ಜ್ವರ ಮತ್ತು ಮಂಗನ ಸಾವು ಕುರಿತು ಸರ್ವೇಕ್ಷಣೆ ಕೈಗೊಳ್ಳಲಾಗಿದೆ. ಪಾಸಿಟಿವ್ ಪ್ರಕರಣಗಳನ್ನು ಎಬಿಎಆರ್ಕೆ ಯೋಜನೆಯಡಿ ರೆಫರ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಮಾತನಾಡಿ, ಸಿಮ್ಸ್ ಆವರಣದಲ್ಲಿ ಪಿಎಂ ಅಭಿಮ್ ಯೋಜನೆಯಡಿ 50 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇರ್ ಮತ್ತು ಹೈಟೆಕ್ ಪ್ರಯೋಗಶಾಲೆ ಮಂಜೂರಾಗಿದ್ದು ಟೆಂಡರ್ ಕರೆಯಲಾಗಿದೆ ಎಂದರು.
ಸಚಿವರು, ಈ ತಿಂಗಳ ಕೊನೆಯಲ್ಲಿ ಸಿಮ್ಸ್ ಆವರಣದಲ್ಲಿ ಪೂರ್ಣಗೊಂಡಿರುವ ಎಂಸಿಹೆಚ್ ಆಸ್ಪತ್ರೆ, ಲೈಬ್ರರಿ, ರೀಜಿನಲ್ ವ್ಯಾಕ್ಸಿನ್ ಸೆಂಟರ್ನ್ನು ಉದ್ಘಾಟಿಸಲಾಗುವುದು ಎಂದರು.
ಜಿಲ್ಲಾಸ್ಪತ್ರೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ: ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯು ಸಿಮ್ಸ್ ಬೋಧನಾ ಆಸ್ಪತ್ರೆಯೂ ಆಗಿದ್ದು ಕಾರ್ಯದೊತ್ತಡ ಹೆಚ್ಚಿದೆ. ಅನೇಕ ಕೊರತೆಗಳೂ ಇವೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯೂ ಇದೆ. ಆಸ್ಪತ್ರೆಯಲ್ಲಿ ದಟ್ಟಣೆ, ರೋಗಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು ಇತರೆ ಜಿಲ್ಲೆಗಳಿಗೆ ತೆರಳುತ್ತಿದ್ದಾರೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತಹ ಸ್ಥಳದಲ್ಲಿ 400 ರಿಂದ 500 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲು ನಗರದಲ್ಲಿ ಒಂದು ಉತ್ತಮ ಜಾಗವನ್ನು ನೋಡಿ, ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಸೂಕ್ತ ಸ್ಥಳ ನೋಡಿ, ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತçಚಿಕಿತ್ಸಕರು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರ ನೀರು ಸರಬರಾಜು ಮಂಡಳಿ ಎಇ , ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ
ರಾಜ್ಯದ ‘SC, ST ಸಮುದಾಯ’ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ‘ಉಚಿತ KAS Mains ತರಬೇತಿ’ಗೆ ಅರ್ಜಿ ಆಹ್ವಾನ