ಮೈಸೂರು : ಇತ್ತೀಚಿಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ ಹೆಂಡತಿಯನ್ನು ಕೊಲ್ಲೋದು ಅಥವಾ ಹೆಂಡತಿ ಗಂಡನನ್ನು ಕೊಲ್ಲುವುದು ಆತಂಕಕ್ಕೆ ಕಾರಣವಾಗಿದೆ ಇವರಿಬ್ಬರ ಮಧ್ಯ ಮಕ್ಕಳು ಅನಾಥರಾಗುತ್ತಿದ್ದಾರೆ ಇದೀಗ ಮೈಸೂರಿನಲ್ಲಿ ಅಂತಹ ಘಟನೆ ನಡೆದಿದ್ದು ಗಂಡನ ಕಥೆ ಮುಗಿಸಿ ಆತನಿಗೆ ಚಟ್ಟ ಕಟ್ಟಲು ಪ್ಲಾನ್ ಮಾಡಿದ್ದ ಪತ್ನಿಯೊಬ್ಬಳು ಸಿಕ್ಕಿ ಬಿದ್ದಿದ್ದು ಹಾಗೆ ಜೊತೆಗೆ ಪೊಲೀಸರು ಒಟ್ಟು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಜಿಲ್ಲೆಯ ನಂಜನಗೂಡು ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಕಿಲಾಡಿ ಪತ್ನಿ ಅಂದರ್ ಆಗಿದ್ದಾರೆ. ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು, ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದ ಪತ್ನಿ ಪೊಲೀಸರು ಹೆಣೆದ ಬಲೆಗೆ ಸಿಲುಕಿದ್ದಾರೆ. ಸಹೋದರ ಹಾಗೂ ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ?
ರಾಜೇಂದ್ರ ಹಾಗೂ ಪತ್ನಿ ಸಂಗೀತಾ ನಡುವೆ ಭಿನ್ನಾಭಿಪ್ರಾಯವಿತ್ತು, ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರ ನಡುವೆ ಸಾಮರಸ್ಯ ಇರಲಿಲ್ಲ. ಅಕ್ಟೋಬರ್ 25 ರಂದು ರಾಜೇಂದ್ರ ಅವರು ಪತ್ನಿ ಸಂಗೀತಾಳನ್ನ ತಮ್ಮ ಸ್ಕೂಟರ್ನಲ್ಲಿ ಕೂರಿಸಿಕೊಂಡು ನಂಜನಗೂಡಿನ ಹುಂಡುವಿನಹಳ್ಳಿ ಬಡಾವಣೆಯ ಮುಡಾ ಲೇಔಟ್ ಬಳಿ ತೆರಳುತ್ತಿದ್ದಾಗ ಮುಂದೆ ಸಾಗುತ್ತಿದ್ದ ಬಿಳಿ ಬಣ್ಣದ ಕಾರು ಅಡ್ಡವಾಗಿ ಬಂದು ನಿಂತಿದೆ.
ನಂತರ ಈ ಕಾರಿನಲ್ಲಿದ್ದ ವ್ಯಕ್ತಿ ಹತ್ತಿರ ಬಂದು ಸ್ಕೂಟರ್ ಬೀಳಿಸಿದ್ದಾನೆ. ಆಗ ರಾಜೇಂದ್ರ ಹಾಗೂ ಸಂಗೀತಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ವ್ಯಕ್ತಿ ರಾಜೇಂದ್ರ ಜೊತೆ ಜಗಳ ಮಾಡಿದ್ದಾನೆ. ಇದೇ ವೇಳೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಗೀತಾ ಬಳಿ ಬಂದು ಕುತ್ತಿಗೆಯಲ್ಲಿದ್ದ ಚೈನ್ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ರಾಜೇಂದ್ರ ಅವರಿಗೆ ತಿವಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.








