ಬೆಂಗಳೂರು : ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವ ದಹಿಸಿರುವ ಘಟನೆಯೊಂದು ಕಡುಬೀಸನಹಳ್ಳಿಯ ಕರಿಯಮ್ಮನ ಅಗ್ರಹಾರದಲ್ಲಿ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಇಜುಲ್ ಹಕ್ (25) ಎಂದು ಗುರುತಿಸಲಾಗಿದೆ.ಪ್ರಕರಣ ಸಂಬಂಧ ಡೆಲಿವರಿ ಏಜೆಂಟ್ ಆಗಿದ್ದ ಮುನಾವರ್ ಅಲಿ (22) ಎಂಬಾತನನ್ನು ಪೊಲೀಸರು ಬಂದನಕ್ಕೊಳಪಡಿಸಿದ್ದಾರೆ.
ಮೃತ ಇಜುಲ್ ಹಕ್ ಹಾಗೂ ಆರೋಪಿ ಅಲಿ ಇಬ್ಬರೂ ಅಸ್ಸಾಂ ಮೂಲದವರಾಗಿದ್ದಾರೆ. ಮೃತ ವ್ಯಕ್ತಿ ವಿವಾಹಿತನಾಗಿದ್ದು, 6 ತಿಂಗಳ ಹೆಣ್ಣು ಮಗುವಿದೆ. ಪತ್ನಿ ಹಾಗೂ ಮಗು ಅಸ್ಸಾಂನಲ್ಲೇ ವಾಸವಿದ್ದು, ಒಂದು ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ. ಸಲಾವುದ್ದೀನ್ ಎಂಬುವವರ ಶೆಡ್ ನಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ.
ಆರೋಪಿ ಅಲಿ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಹಕ್ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಿಸಿದ್ದಾನೆ. ಇದರಂತೆ ಕಳೆದ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಈ ವೇಳೆ ಹಕ್ ಅವರ ಇಬ್ಬರು ಸ್ನೇಹಿತರಾದ ಶಹನೂರ್ ರೆಹಮಾನ್ ಮತ್ತು ಫರೀದುಲ್ ಇಸ್ಲಾಂ ಬೆಂಬಲಕ್ಕೆ ಬಂದಿದ್ದು, ಈ ವೇಳೆ ಆರೋಪಿ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿ, ಹೋಗಿದ್ದಾನೆ.
ಇದೆ ವೇಳೆ ಶುಕ್ರವಾರ ನಸುಕಿನ ಜಾವ ಆರೋಪಿ ಅಲಿ ಶೆಡ್ ಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ವೇಳೆ ಹಕ್ ಅವರ ಸೋದರ ಮಾವ ರಶೀದುಲ್ ಹಕ್ ಶೆಡ್ನಿಂದ ದೂರದಲ್ಲಿ ಮಲಗಿದ್ದು, ಮೂವರ ಕೂಗಾಟ ಕೇಳಿ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಇಜುಲ್ ಹಕ್ ಸಾವನ್ನಪ್ಪಿದ್ದು, ಮತ್ತಿಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳ ವಾರ್ಡ್ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.