ಬಾಗಲಕೋಟೆ: ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆಯ ಹಿನ್ನೆಲೆ
ಬುಧವಾರ ರಾತ್ರಿ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಗ್ರಾಮಸ್ಥರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದರು. ಪಂಚಾಯಿತಿ ಕಟ್ಟಡದ ಛಾವಣಿಯ ಮೇಲೆ ಕುಳಿತಿದ್ದ ಕೆಲವು ಯುವಕರಲ್ಲಿ ಯಾರೋ ಒಬ್ಬರು ಕೆಳಗೆ ಕುಳಿತಿದ್ದವರ ಮೇಲೆ ಸಣ್ಣ ಕಲ್ಲನ್ನು (ಹಳ್ಳು) ಎಸೆದಿದ್ದಾರೆ ಎನ್ನಲಾಗಿದೆ.
ಛಾವಣಿಯ ಮೇಲೆ ಕುಳಿತಿದ್ದ 19 ವರ್ಷದ ದಲಿತ ಯುವಕ ಸುದೀಪ್ ಬಸಪ್ಪ ಪಾಂಗಿ ಎಂಬಾತನೇ ಕಲ್ಲು ಎಸೆದಿದ್ದಾನೆ ಎಂದು ಆರೋಪಿಸಿ, ಆರೋಪಿಗಳು ಆತನೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ಸುದೀಪ್ಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ.ತೀವ್ರವಾಗಿ ಗಾಯಗೊಂಡ ಸುದೀಪ್ನನ್ನು ತಕ್ಷಣ ಜಮಖಂಡಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು ಭೀಮಪ್ಪ ಮಾಳಿ, ವಿಜಯ ರಾಮಚಂದ್ರ ಸಾವಳಗಿ ಮತ್ತು ಮಲ್ಲಿಕಾರ್ಜುನ ನಿಂಗಪ್ಪ ಮಾಳಿ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.








