ನವದೆಹಲಿ : ಸೆಪ್ಟೆಂಬರ್ 14 ರಂದು ನಡೆಯಲಿರುವ ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಉರ್ವಶಿ ಜೈನ್ ನೇತೃತ್ವದ ನಾಲ್ವರು ಕಾನೂನು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ನ ಬಾಗಿಲು ತಟ್ಟಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯವನ್ನು ಆಯೋಜಿಸುವುದು ರಾಷ್ಟ್ರೀಯ ಘನತೆ ಮತ್ತು ಸಾರ್ವಜನಿಕ ಭಾವನೆಗೆ ವಿರುದ್ಧವಾದ ಸಂದೇಶವನ್ನು ನೀಡುತ್ತದೆ ಎಂದು ಅವರು ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ.
ಭಾನುವಾರ ಪಂದ್ಯ ನಡೆಯಲಿದ್ದು,ಶುಕ್ರವಾರ ಅರ್ಜಿ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಸಲ್ಲಿಸಿದ್ದರು. ಇದರ ತುರ್ತು ವಿಚಾರಣೆಗಾಗಿ ವಕೀಲರು, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಟೋಯ್ ಅವರ ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ತುರ್ತು ವಿಚಾರಣೆಗೆ ಏನು ಆತುರ? ಭಾನುವಾರಕ್ಕೆ ಪಂದ್ಯ ನಿಗದಿಪಡಿಸಲಾಗಿದೆ. ಈಗ ನಾವೇನು ಮಾಡುವುದಕ್ಕೆ ಸಾಧ್ಯ? ಪಂದ್ಯ ನಡೆಯಲಿ ಬಿಡಿ’ ಎಂದಿದೆ..
ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 14 ರಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 2025 ರ ಏಷ್ಯಾ ಕಪ್ಗಾಗಿ ಪರಸ್ಪರ ಮುಖಾಮುಖಿಯಾಗಲಿವೆ.