ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ತಾಲೂಕಿನಲ್ಲಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿರುವ ಡಾ. ಪ್ರತಿಭಾ ಆರ್. ಅವರು ಅಕ್ರಮ ದಂಧೆಕೋರರ ವಿರುದ್ಧ ದಂಡಯಾತ್ರೆ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಸದ್ದಿಲ್ಲದೆ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ (ಲೆಟರೈಟ್ ಕಲ್ಲು) ಮತ್ತು ಮರಳು ಸಾಗಾಣಿಕೆ ಜಾಲದ ಮೇಲೆ ಖಡಕ್ ದಾಳಿ ನಡೆಸುವ ಮೂಲಕ ದಂಧೆಕೋರರ ನಡುಕ ಹುಟ್ಟಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಂಬಿಟ್ಟಿಗೆ, ಮರಳು ಸಾಗಾಟ ನಿರತ ಲಾರಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದೆ.
ಹಿರೇನೆಲ್ಲೂರು ಗ್ರಾಮದಲ್ಲಿ ನಡೆದಿದ್ದೇನು?
ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇನೆಲ್ಲೂರು ಗ್ರಾಮದ ಸರ್ವೆ ನಂಬರ್ 211 ರ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಯಿಲ್ಲದೆ, ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಲಾರಿಗಳ ಮೂಲಕ ಸಾಗಿಸಲಾಗುತ್ತಿದೆ ಎಂಬ ದೂರು ತಹಶೀಲ್ದಾರ್ ಅವರಿಗೆ ತಲುಪಿತ್ತು.
ಮಾಹಿತಿ ಸಿಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಈ ವೇಳೆ ಅಕ್ರಮವಾಗಿ ಜಂಬಿಟ್ಟಿಗೆ ಮತ್ತು ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ರೆಡ್ ಹ್ಯಾಂಡ್ ಆಗಿ ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಿಯಮಾವಳಿಗಳ ಪ್ರಕಾರ ಪ್ರಕರಣ ದಾಖಲಿಸಲಾಗಿದ್ದು, ಎಫ್ಐಆರ್ (FIR) ದಾಖಲು ಮಾಡಲಾಗಿದೆ.
ದಂಧೆಕೋರರಿಗೆ ತಹಶೀಲ್ದಾರ್ ಖಡಕ್ ಎಚ್ಚರಿಕೆ
ಅಕ್ರಮ ಜಂಬಿಟ್ಟಿಗೆ ಕಲ್ಲು ತೆಗೆಯುತ್ತಿದ್ದ ಜಾಗಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಆರ್., ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಯಾವುದೇ ಆಸ್ಪದ ನೀಡುವುದಿಲ್ಲ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ.
“ನನ್ನ ಸಾಗರ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಕ್ರಮ ಮರಳು ಸಾಗಾಣಿಕೆ ಅಥವಾ ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ನಡೆಯಲು ಬಿಡುವುದಿಲ್ಲ. ಸರ್ಕಾರದ ನಿಯಮಗಳನ್ನು ಮೀರಿ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುವ ಅಕ್ರಮ ಸಾಗಾಣಿಕೆದಾರರ ವಿರುದ್ಧ ಯಾವುದೇ ಮುಲಾಜಿಲ್ಲದೆ, ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.” – ಡಾ. ಪ್ರತಿಭಾ ಆರ್., ತಹಶೀಲ್ದಾರ್, ಸಾಗರ
ತಾಲೂಕಿನಾದ್ಯಂತ ಹದ್ದಿನ ಕಣ್ಣು
ನೂತನ ತಹಶೀಲ್ದಾರ್ ಆಗಿ ಬಂದ ದಿನದಿಂದಲೂ ಡಾ. ಪ್ರತಿಭಾ ಅವರು ಸಾಗರ ತಾಲೂಕಿನಾದ್ಯಂತ ನಿರಂತರವಾಗಿ ಸಂಚರಿಸುತ್ತಾ ಸಾರ್ವಜನಿಕ ಕುಂದುಕೊರತೆಗಳ ಜೊತೆಗೆ ಇಂತಹ ಅಕ್ರಮಗಳ ಮೇಲೆಯೂ ಹದ್ದಿನ ಕಣ್ಣಿಟ್ಟಿದ್ದಾರೆ. ಮಲೆನಾಡಿನ ಪ್ರಕೃತಿ ಮತ್ತು ಸರ್ಕಾರಿ ಜಮೀನುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅವರು ತೆಗೆದುಕೊಳ್ಳುತ್ತಿರುವ ಇಂತಹ ದಿಟ್ಟ ನಿರ್ಧಾರಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು, ಅಕ್ರಮ ದಂಧೆ ನಡೆಸುವವರಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿದ್ದಾರೆ.
ದಾಳಿ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಸಾಥ್
ಈ ಯಶಸ್ವಿ ದಾಳಿಯ ಕಾರ್ಯಾಚರಣೆಯ ಸಂದರ್ಭದಲ್ಲಿ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ರಾಘವೇಂದ್ರ, ಕಂದಾಯ ನಿರೀಕ್ಷಕರು (Revenue Inspector) ವಿನಾಯಕ್, ಗ್ರಾಮ ಆಡಳಿತ ಅಧಿಕಾರಿ (VAO) ಭೀಮಣ್ಣ, ಬೀಟ್ ಪೊಲೀಸ್ ಸಿಬ್ಬಂದಿ ಮಂಜುನಾಥ್ ಹಾಗೂ ಗ್ರಾಮ ಸಹಾಯಕ ಲೋಕೇಶ್ ಸೇರಿದಂತೆ ಪ್ರಮುಖ ಅಧಿಕಾರಿಗಳು ತಹಶೀಲ್ದಾರ್ ಡಾ.ಪ್ರತಿಭಾ ಅವರಿಗೆ ಸಾಥ್ ನೀಡಿದ್ದಾರೆ.








