ಬೆಂಗಳೂರು : ಮಳೆ ಬರುವ ಸಂದರ್ಭದಲ್ಲಿ ರಾಜ್ಯದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
2024-25 ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ದಿನಾಂಕ : 29.05.2024 ರಿಂದ ಶಾಲೆಗಳು ಪ್ರಾರಂಭವಾಗಿರುತ್ತದೆ. ಪ್ರಸ್ತುತ, ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಮಳೆಯುಂಟಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ಕೆಳಕಂಡ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶೈಕ್ಷಣಿಕ ಉಸ್ತುವಾರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಈ ಮೂಲಕ ಮತ್ತೊಮ್ಮೆ ಸೂಚಿಸಿದೆ.
1) ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿರುವ ಕೆಲವು ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಹಾನಿಗೊಳಗಾಗುವ ಅಥವಾ ಬಿದ್ದು ಹೋಗುವ ಸಂಭವವಿರುತ್ತದೆ. ಪ್ರಯುಕ್ತ, ಅಂತಹ ಶಾಲಾ ಕಟ್ಟಡಗಳನ್ನು, ತರಗತಿಯ ಕೊಠಡಿಗಳನ್ನು ಮತ್ತು ಶೌಚಾಲಯಗಳನ್ನು ಬಳಸದೇ, ಸಮೀಪದ ಸುಸ್ಥಿತಿಯಲ್ಲಿರುವ ಕಟ್ಟಡ, ಕೊಠಡಿಗಳನ್ನು ಹಾಗೂ ಶೌಚಾಲಯಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು. ವಿದ್ಯಾರ್ಥಿಗಳು ಇಂತಹ ಕಟ್ಟಡಗಳ, ಕೊಠಡಿಗಳ, ಶೌಚಾಲಯಗಳ, ಕಾಂಪೌಂಡ್ಗಳ ಹಾಗೂ ಶಾಲಾ ಆವರಣದಲ್ಲಿನ ಮರಗಳ ಸಮೀಪದಲ್ಲಿ ಸುತ್ತಾಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸತಕ್ಕದ್ದು. ಶಿಥಿಲಾವಸ್ಥೆಯಲ್ಲಿರುವ ಅಥವಾ ಅಪಾಯಕಾರಿಯಾಗಿರುವ ಇಂತಹ ಸನ್ನಿವೇಶಗಳ ತೀವ್ರತೆಯನ್ನು ಪರಿಗಣಿಸಿ ಅವುಗಳನ್ನು ತೆರವುಗೊಳಿಸಲು ಅಥವಾ ನೆಲಸಮಗೊಳಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು.
2) ಕೆಲವೆಡೆ ತೀವ್ರ ಮಳೆಯಿಂದಾಗಿ ಪ್ರವಾಹ ಅಥವಾ ನೆರೆ ಬಂದು ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು ಹೋಗಲು ತೊಂದರೆಯುಂಟಾಗುವ ಅಥವಾ ಕೆಲವು ಸಂದರ್ಭಗಳಲ್ಲಿ ಮಳೆಯಿಂದಾಗಿ ಶಾಲೆಗಳ ಕೊಠಡಿಗಳಲ್ಲಿ ಮತ್ತು ಆವರಣದೊಳಗೆ ನೀರು ಸಂಗ್ರಹವಾಗುವ ಸಂಭವವಿರುತ್ತದೆ
3) ಇಂತಹ ಸಂದರ್ಭಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ, ಪುರ ಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳ (ಸ್ಥಳೀಯ ಸಂಸ್ಥೆಗಳ) ಸಹಕಾರದಿಂದ ಶಾಲಾ ಕಟ್ಟಡದಲ್ಲಿ ಅಥವಾ ಆವರಣದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸುವುದು.
4) ಇಂತಹ ಸನ್ನಿವೇಶಗಳಲ್ಲಿ ಅಗತ್ಯಾನುಸಾರ / ಸಂದರ್ಭಾನುಸಾರ ಶಾಲಾ ಮುಖ್ಯೋಪಾಧ್ಯಾಯರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಜಿಲ್ಲಾ ಉಪನಿರ್ದೇಶರು(ಆಡಳಿತ) ರವರ ಪೂರ್ವಾನುಮತಿ ಪಡೆದು ಶಾಲೆಗಳಿಗೆ ರಜೆಯನ್ನು ಘೋಷಿಸುವುದು. ಅಂತಹ ರಜಾ ದಿನಗಳಲ್ಲಿನ ಪಾಠ-ಪ್ರವಚನಗಳನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದೆ.
5) ಶಾಲಾ ಆವರಣದಲ್ಲಿ ತೆರೆದ ಸಂಪು/ಪಿಟ್/ಫೌಂಡೇಷನ್ ಪಿಟ್/ತೆರೆದ ಗುಂಡಿ/ಮ್ಯಾನ್ ಹೋಲ್ ಇತ್ಯಾದಿಗಳು ಇದ್ದಲ್ಲಿ ಅವುಗಳನ್ನು ಯಾವುದೇ ಕಾರಣಕ್ಕೂ ತೆರೆದಿಡದೇ ಸುರಕ್ಷಿತವಾಗಿರಿಸುವ/ಭದ್ರಗೊಳಿಸುವ ಕುರಿತು ಅಗತ್ಯ ಕ್ರಮವಹಿಸುವುದು ಹಾಗೂ ವಿದ್ಯಾರ್ಥಿಗಳು ಅವುಗಳ ಬಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸುವುದು.
6) ವಿದ್ಯುಚ್ಛಕ್ತಿ ಸಂಪರ್ಕ ಪಡೆದಿರುವ wire/cable ಗಳು ಯಾವುದೇ ಕಾರಣಕ್ಕೂ ನೆಲದ ಮೇಲೆ ಹಾದು ಹೋಗದಂತೆ ಹಾಗೂ ವಿದ್ಯಾರ್ಥಿಗಳಿಗೆ ಎಟುಕದಂತೆ ಕ್ರಮವಹಿಸುವುದು ಮತ್ತು ಸುರಕ್ಷಿತವಲ್ಲದ ವಿದ್ಯುತ್ ಸಂಪರ್ಕದಿಂದ ಸಂಭವಿಸಬಹುದಾದ ಅವಘಡಗಳ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು. ಇಂತಹ ಪ್ರಕರಣಗಳಲ್ಲಿ ಈ ಕಛೇರಿಯ ಸುತ್ತೋಲೆ ಸಂಖ್ಯೆ: ಎಡಿಎಂ2(4)/ಶಾ.ಆ.ಎ-31/ 2021-22 ದಿನಾಂಕ: 13.09.2021 ರಂತೆ ನಿಯಮಾನುಸಾರ ಸೂಕ್ತ ಕ್ರಮಗಳನ್ನು ವಹಿಸತಕ್ಕದ್ದು.
7) ಶಾಲೆಗಳಲ್ಲಿ ಸಣ್ಣ ಮಟ್ಟದ ದುರಸ್ತಿಗಳಿದ್ದಲ್ಲಿ ಹಾಗೂ ಕಟ್ಟಡದಿಂದ (ಮೇಲ್ಪಾವಣಿ ಇತ್ಯಾದಿ) ನೀರು ಸೋರುವಿಕೆ ಕಂಡುಬಂದಲ್ಲಿ ಗ್ರಾಮಪಂಚಾಯ್ತಿ/ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ತುರ್ತಾಗಿ ದುರಸ್ತಿಯನ್ನು ಕೈಗೊಳ್ಳುವುದು.
ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಹಾಗೂ ಉಲ್ಲೇಖ (2), (3) ಮತ್ತು (4) ರ ಸುತ್ತೋಲೆಗಳಲ್ಲಿ ಈ ಸಂಬಂಧ ಈಗಾಗಲೇ ತಿಳಿಸಿರುವ ಎಲ್ಲಾ ಅಂಶಗಳನ್ನು ಕಟ್ಟನಿಟ್ಟಾಗಿ ಪಾಲಿಸುವುದು ಹಾಗೂ ಸ್ಥಳೀಯ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಮತ್ತು ತಾಲ್ಲೂಕು/ಜಿಲ್ಲಾಡಳಿತಗಳ ಸಹಕಾರದೊಂದಿಗೆ/ಮಾರ್ಗದರ್ಶನದೊಂದಿಗೆ ಅಗತ್ಯ ಕ್ರಮಗಳನ್ನು ಸಕಾಲದಲ್ಲಿ ಕೈಗೊಳ್ಳುವುದು. ಮಳೆಯಿಂದ ಯಾವುದೇ ವಿದ್ಯಾರ್ಥಿ ಅಥವಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ, ಶಾಲೆಯ ಆವರಣದಲ್ಲಿ ಹಾಗೂ ಶಾಲೆಯ ಸುತ್ತ-ಮುತ್ತ ಯಾವುದೇ ರೀತಿಯ ತೊಂದರೆ ಅಥವಾ ಜೀವ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಹಾಗೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸಿಕೊಂಡು ಹೋಗುವಂತೆ ಈ ಮೂಲಕ ಸೂಚಿಸಿದೆ. ಪ್ರತಿ ವರ್ಷ ಇಂತಹ ಸನ್ನಿವೇಶಗಳಲ್ಲಿ ಮೇಲ್ಕಂಡ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈ ಮೂಲಕ ತಿಳಿಸಲಾಗಿದೆ.