ನವದೆಹಲಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರಾಜ್ಯಾದ್ಯಂತ ನಡೆಯುತ್ತಿರುವ ಪೌರಕಾರ್ಮಿಕರ ಮುಷ್ಕರವನ್ನು ರಾಜ್ಯ ಕಾಂಗ್ರೆಸ್ ಸರಕಾರವು ಸ್ವಚ್ಛತೆ, ನೈರ್ಮಲ್ಯ ಅಂಶಗಳ ಜತೆಗೆ ಮಾನವೀಯ ಆಯಾಮದಿಂದಲೂ ನೋಡಬೇಕು ಎಂದು ಸಲಹೆ ಮಾಡಿದ್ದಾರೆ.
ಸಮಾಜದ ಸ್ವಾಸ್ಥ್ಯ ಕಾಪಾಡುವ ಯೋಧರಾಗಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುವ ಇವರ ಸೇವೆಯನ್ನು ಸರಕಾರ ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಲ್ಲೆಡೆ ರಾಶಿರಾಶಿ ಕಸ ಬೀಳುತ್ತಿದೆ ಎಂಬುದನ್ನು ಅವರು ಗಮನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.