ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲವೆನ್ನುತ್ತಲೇ, ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ ಮೂಲೆಗುಂಪಾಗಿಸುವ ಕಾರ್ಯಕ್ಕೆ ಪ್ರಾಧಿಕಾರ ಸಾಕ್ಷಿಯಾಗಬಯಸುವುದಿಲ್ಲ ಎಂದು ಹೇಳಿದ್ದಾರೆ.
ನಾಡಿನ ಅಭಿವೃದ್ಧಿ ಎನ್ನುವುದು ಸಂಪೂರ್ಣವಾಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಅವಲಂಬಿಸಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಬದುಕಿಗೆ ಕಲಿಕಾ ವ್ಯವಸ್ಥೆಯೇ ನಿರ್ಣಾಯಕ ಪಾತ್ರವನ್ನು ಹೊಂದಿರುತ್ತದೆ. ವಿಶ್ವದ್ಯಾಂತ ನಡೆಸಿರುವ ಅಧ್ಯಯನಗಳಲ್ಲಿ ಪ್ರಾರಂಭಿಕವಾಗಿ ತಾಯ್ನುಡಿಯನ್ನು ಪ್ರಭುತ್ವದ ಮಟ್ಟಕ್ಕೆ ಕಲಿಸುವುದೇ ಜ್ಞಾನಾರ್ಜನೆಯ ದೃಷ್ಠಿಯಿಂದ ಬುನಾದಿ ಎಂಬುದನ್ನು ನಿರೂಪಿಸಿವೆ ಎಂದಿರುವ ಬಿಳಿಮಲೆ, ತಾಯ್ನುಡಿಯು ಅನನ್ಯತೆ, ಸಾಂಸ್ಕೃತಿಕ ಗುರುತು, ಸ್ವಾಭಿಮಾನ, ಸ್ವಂತಿಕೆ, ಸೃಜನಶೀಲತೆ, ಸ್ವತಂತ್ರ ತೀರ್ಮಾನವನ್ನು ಕೈಗೊಳ್ಳುವ ಸಾಮರ್ಥ್ಯ ಇತ್ಯಾದಿಗಳನ್ನು ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸಲು ಸಹಾಯಕವಾಗುತ್ತದೆ ಎಂಬುದನ್ನು ಅಸಂಖ್ಯ ಸಂಶೋಧನೆಗಳು ಪ್ರಾಯೋಗಿಕವಾಗಿ ನಿರೂಪಿಸಿವೆ ಎಂದಿದ್ದಾರೆ.
ಶಿಕ್ಷಣ ಹಕ್ಕು ಕಾಯ್ದೆಯ ಪ್ರಕರಣ 29 (ಎಫ್)ಗೆ ತಿದ್ದುಪಡಿ ತನ್ನಿ
2013-18ರಲ್ಲಿ ಸರ್ಕಾರವು ಮಕ್ಕಳ ಹಕ್ಕು ಕಾಯ್ದೆಯ ಪ್ರಕರಣ 29 (ಎಫ್)ಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ರಾಷ್ಟ್ರಪತಿಯವರ ಅಂಗೀಕಾರಕ್ಕೆ ಕಳುಹಿಸಿದ್ದು, ಅದರಂತೆ ಕನಿಷ್ಟ 8ನೇ ತರಗತಿವರೆಗೆ ಶಿಕ್ಷಣ ಮಾಧ್ಯಮ ಮಾತೃಭಾಷೆಯಲ್ಲಿರಬೇಕಾಗುತ್ತದೆ. ಮಾನ್ಯ ಮುಖ್ಯಮಂತ್ರಿಗಳಲ್ಲಿ ರಾಷ್ಟ್ರಪತಿಯವರಿಂದ ಅಂಗೀಕಾರ ಪಡೆಯುವ ಕೆಲಸದ ಅನುಪಾಲನೆಯನ್ನು ಇತ್ತೀಚೆಗೆ ಅವರ ನವದೆಹಲಿಯ ಭೇಟಿಯಲ್ಲಿ ನಿರ್ವಹಿಸಿದ್ದು, ಇದರ ಬಗ್ಗೆ ಇನ್ನೂ ಹೆಚ್ಚಿನ ಸ್ಪಂದನೆ ಅವಶ್ಯಕತೆ ಎಂದಿರುವ ಬಿಳಿಮಲೆ, ಈ ಆಶಯಕ್ಕೆ ವಿರುದ್ಧವಾಗಿ ಸರ್ಕಾರವು ಆಂಗ್ಲ ಭಾಷಾ ಶಾಲೆಗಳನ್ನು ತೆರೆಯುವ ತೀರ್ಮಾನ ತೆಗೆದುಕೊಂಡಿದೆ ಎಂದಿದ್ದಾರೆ.
ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಪ್ರತ್ಯೇಕ ಪ್ರಾಧಿಕಾರ ರಚಿಸಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರ 2017ರಲ್ಲಿ ಸಲ್ಲಿಸಿರುವ ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿರುವ ಬಿಳಿಮಲೆ, ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಲು ರೂಪಿಸಿರುವ ಕನ್ನಡ ಕಲಿಕಾ ಅಧಿನಿಯಮ 2015 ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದಿದ್ದಾರೆ. ಅಲ್ಲದೇ, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಕನ್ನಡ ಶಾಲೆಗಳ ಸಬಲೀಕರಣಕ್ಕಾಗಿ ಒಂದು ಪ್ರತ್ಯೇಕ ಪ್ರಾಧಿಕಾರವನ್ನು ರಚಿಸಿ ಸರ್ಕಾರವು ಈ ಶಾಲೆಗಳ ಬೆಂಬಲಕ್ಕೆ ನಿಲ್ಲಬೇಕೆಂದು ಅವರು ಹೇಳಿದ್ದಾರೆ.
ದ್ವಿಭಾಷಾ ನೀತಿ ಇಂದಿನ ಅವಶ್ಯಕತೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದಲ್ಲಿ ದ್ವಿಭಾಷಾ ನೀತಿಯ ಅವಶ್ಯಕತೆಯನ್ನು ಪ್ರತಿಪಾದಿಸಿದ್ದು, ತನ್ನ ನಿರ್ಧಾರವನ್ನು ಎಲ್ಲ ವೇದಿಕೆಗಳಲ್ಲಿ ಸ್ಪಷ್ಟಪಡಿಸಿದೆ ಎಂದು ಬಿಳಿಮಲೆ ಹೇಳಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿ ನಿರೂಪಣಾ ಪ್ರಕ್ರಿಯೆಯಲ್ಲಿಯೂ ಪ್ರಾಧಿಕಾರವು ಇದೇ ಸಲಹೆಯನ್ನು ನೀಡಿದ್ದು, ಜುಲೈ ಮಾಸಾಂತ್ಯಕ್ಕೆ ಸಲ್ಲಿಕೆಯಾಗುವ ಶಿಕ್ಷಣ ನೀತಿಯ ವರದಿಯನ್ನು ಕಾಯುತ್ತಿದ್ದೇವೆ. ವರದಿಯ ಸಂಪೂರ್ಣ ಅಧ್ಯಯನವನ್ನು ನಡೆಸಿ ರಾಜ್ಯದಲ್ಲಿ ದ್ವಿಭಾಷಾ ನೀತಿಯ ಅನುಷ್ಠಾನಕ್ಕೆ ಸಾರ್ವಜನಿಕ ಒಮ್ಮತವನ್ನು ಮೂಡಿಸುವಲ್ಲಿ ಪ್ರಾಧಿಕಾರವು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದೆ ಎಂದಿದ್ದಾರೆ. ಕನ್ನಡ ಪರ ಸಂಘಟನೆಗಳು ಈ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದಿರುವ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಪರ ಹೋರಾಟಗಾರರ ಬೆಂಬಲಕ್ಕೆ ಎಂದಿಗೂ ನಿಲ್ಲುತ್ತದೆ ಎಂದಿದ್ದಾರೆ.
5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು
ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು