ಹಾಸನ : ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರಾದೃಷ್ಟಕರ. ಟ್ರಕ್ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದರು.
ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲಾ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ಸಮಯದಲ್ಲಿ ಟ್ರಕ್ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಸಹ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದ ಎಂದು ತಿಳಿಸಿದರು.