ಬೆಂಗಳೂರು: ಮುಖ್ಯಮಂತ್ರಿಗಳ ‘ಜನಸ್ಪಂದನ’ ಕಾರ್ಯಕ್ರಮ ಮತ್ತು ಒಟ್ಟಾರೆ ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಹೊಸ ತಂತ್ರಜ್ಞಾನಗಳನ್ನು ಸಕ್ರಿಯವಾಗಿ ಬಳಸಿಕೊಳ್ಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ‘ಜನಸ್ಪಂದನ’ ಮತ್ತು ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಥವಾ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ರಾಜಧಾನಿ ಬೆಂಗಳೂರಿಗೆ ಬರುವ ಅಗತ್ಯವಿಲ್ಲ. ಸ್ಥಳೀಯ ಮಟ್ಟದಲ್ಲೇ ಮುಖಂಡರು ಮತ್ತು ಅಧಿಕಾರಿಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿಗಳ ಕಚೇರಿ ಮತ್ತು ಈ ಆಡಳಿತ ಇಲಾಖೆ ಮಾಡುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸ್ಪಷ್ಟನೆ ನೀಡಿದ ಅವರು, ಯೋಜನೆಗಳಲ್ಲಿ ಕಂಡುಬರುತ್ತಿರುವ ಲೋಪದೋಷಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು. ಕೆಲವು ಸರ್ಕಾರಿ ಸೌಲಭ್ಯಗಳು ಅನರ್ಹರಿಗೆ ಹಾಗೂ ಹೊರ ರಾಜ್ಯದವರಿಗೆ ಹೋಗುತ್ತಿರುವುದು ಮತ್ತು ಒಂದೇ ಫಲಾನುಭವಿಯ ಮೂರು-ನಾಲ್ಕು ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಮಾಧ್ಯಮಗಳ ಮೂಲಕವೇ ಬೆಳಕಿಗೆ ಬಂದಿದೆ. ಈ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿ, ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಮಾಡಲಾಗುತ್ತಿದೆ. ಹೀಗಾಗಿ ಈ ಪರಿಷ್ಕರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸಮರ್ಥಿಸಿಕೊಂಡರು.








