ಮಂಡ್ಯ : ಮದ್ದೂರು ತಾಲೂಕಿನ ಅಬಲವಾಡಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ತೋಪಿನ ತಿಮ್ಮಪ್ಪ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳಲು ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ರಾತ್ರಿ ಜರುಗಿದೆ.
ಹಲವು ವರ್ಷಗಳಿಂದ ಶ್ರೀ ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್, ಆಡಳಿತ ಮಂಡಳಿ ದೇಗುಲದ ನಿರ್ವಹಣೆಯನ್ನು ಮಾಡಿಕೊಂಡು ಬರುತ್ತಿದ್ದರು. ಏಕಾಏಕಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಹಾಗೂ ಅಧಿಕಾರಿಗಳು ಮುಜರಾಯಿ ಇಲಾಖೆಗೆ ದೇಗುಲವನ್ನು ಒಳಪಡಿಸಿಕೊಂಡು ಹುಂಡಿಯನ್ನು ದೇಗುಲದಲ್ಲಿ ಇಡಲು ಮುಂದಾದಾಗ ದೇಗುಲದ ಆವರಣದಲ್ಲಿ ನೂರಾರು ಮಂದಿ ಭಕ್ತಾಧಿಗಳು ಹಾಗೂ ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ಸುಮಾರು 3 ಗಂಟೆಗಳ ಕಾಲ ಅಡ್ಡಗಟ್ಟಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ತಹಶೀಲ್ದಾರ್ ಹಾಗೂ ಗ್ರಾಮಸ್ಥರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಗ್ರಾಮಸ್ಥರ ಜೊತೆ ಮಾತನಾಡಿ, ಈ ದೇವಾಲಯವು ಸಿ ಶ್ರೇಣಿಗೆ ಸೇರಿದ್ದು, ಇದನ್ನು ಮುಜರಾಯಿ ಇಲಾಖೆಗೆ ವಶಕ್ಕೆ ತೆಗೆದುಕೊಳ್ಳುವಂತೆ ಕೆಲ ಗ್ರಾಮಸ್ಥರು ಹೈಕೋರ್ಟ್ ಮೊರೆ ಹೋಗಿದ್ದರು.
ಈ ವಿಚಾರವಾಗಿ ಸತತ ವಿಚಾರಣೆ ನಡೆದು ನ. 18 ರಂದು ಹೈಕೋರ್ಟ್ ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಕೊರ್ಟ್ ಆದೇಶದ ಮೇರೆಗೆ ಇಲಾಖೆ ವಶಕ್ಕೆ ತೆಗೆದುಕೊಳ್ಳಲು ಆಗಮಿಸಿದ್ದೇವೆ. ಇನ್ನೆರಡು ದಿನಗಳ ಕಾಲಾವಕಾಶ ನೀಡಲಾಗುವುದು ಅಷ್ಟರೊಳಗೆ ಭಕ್ತಾದಿಗಳು ಹಾಗೂ ಗ್ರಾಮಸ್ಥರು ದೇಗುಲವನ್ನು ಮುಜರಾಯಿ ಇಲಾಖೆಗೆ ಸುಪರ್ದಿಗೆ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಶವಂತ್ ಕುಮಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ನಾರಾಯಿಣಿ, ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ : ಗಿರೀಶ್ ರಾಜ್, ಮಂಡ್ಯ
ವೇಣುಗೋಪಾಲ್ ಸಲಹೆ ನೀಡಿದ್ದಾರೆ, ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut








