ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಮಾಡೆಲ್ ಕಮ್ ನಟಿ ಟ್ವಿಶಾ ಶರ್ಮಾ ಅವರ ಶಂಕಾಸ್ಪದ ಸಾವು ಮತ್ತು ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದಲ್ಲಿ ಸಾಕ್ಷ್ಯ ನಾಶ, ತನಿಖಾ ಲೋಪದೋಷಗಳು ಹಾಗೂ ಸಾಂಸ್ಥಿಕ ಪಕ್ಷಪಾತದ (Institutional Bias) ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಶನಿವಾರ ಈ ಕುರಿತು ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸೋಮವಾರ (ಮೇ 25) ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ಇದರ ವಿಚಾರಣೆಯನ್ನು ಪ್ರಾರಂಭಿಸಿದೆ.
ಪ್ರಕರಣದ ತನಿಖೆಯಲ್ಲಿ ಸ್ಥಳೀಯ ಪೊಲೀಸರ ಕಡೆಯಿಂದ ಲೋಪದೋಷಗಳು ನಡೆದಿವೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಸಿದ್ದರು. ಮಾಜಿ ಜಿಲ್ಲಾ ನ್ಯಾಯಾಧೀಶರಾಗಿರುವ ಆರೋಪಿಯ ಕುಟುಂಬದ ಪ್ರಭಾವದಿಂದಾಗಿ ತನಿಖೆ ಹಾದಿ ತಪ್ಪುತ್ತಿದೆ ಎಂಬ ಆತಂಕ ವ್ಯಕ್ತವಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸುಪ್ರೀಂ ಕೋರ್ಟ್, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಕೇಂದ್ರೀಯ ತನಿಖಾ ದಳ (CBI) ತಕ್ಷಣವೇ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದೆ. ಮಧ್ಯಪ್ರದೇಶ ಸರ್ಕಾರ ಕೂಡ ಈ ಹಿಂದೆ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು.
ನೊಯ್ಡಾ ಮೂಲದ ಮಾಡೆಲ್ ಮತ್ತು ನಟಿ ಟ್ವಿಶಾ ಶರ್ಮಾ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ವಕೀಲ ಸಮರ್ಥ್ ಸಿಂಗ್ ಅವರನ್ನು ವಿವಾಹವಾಗಿದ್ದರು. ಸಮರ್ಥ್ ಸಿಂಗ್, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಗಿರಿಬಾಲಾ ಸಿಂಗ್ ಅವರ ಪುತ್ರರಾಗಿದ್ದಾರೆ.
ಮದುವೆಯಾದ ಕೆಲವೇ ತಿಂಗಳುಗಳಲ್ಲಿ, ಅಂದರೆ ಮೇ 12 ರಂದು ಭೋಪಾಲ್ನಲ್ಲಿರುವ ಪತಿಯ ಮನೆಯಲ್ಲಿ ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ಮಗಳ ಸಾವಿಗೆ ವರದಕ್ಷಿಣೆ ಕಿರುಕುಳ ಮತ್ತು ದೈಹಿಕ-ಮಾನಸಿಕ ಹಿಂಸೆಯೇ ಕಾರಣ ಎಂದು ಟ್ವಿಶಾ ಪೋಷಕರು ಆರೋಪಿಸಿದ್ದಾರೆ. ಅಲ್ಲದೆ, ಸಾವಿಗೂ ಮುನ್ನ ಟ್ವಿಶಾ ತನ್ನ ಸಹೋದರನಿಗೆ “ನಾನು ಸಿಕ್ಕಿಬಿದ್ದಿದ್ದೇನೆ ಭಾಯ್, ನೀನು ಮಾತ್ರ ಸಿಲುಕಬೇಡ” ಎಂದು ಕಳುಹಿಸಿದ್ದ ಸಂದೇಶವು ಈ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದೆ.








