ಬೆಂಗಳೂರು: ನಗರದ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರಕ್ಕೆ ಸರ್ಕಾರದಿಂದ ನೀಡಿದ್ದಂತ ಭೂಮಿಯನ್ನು ವಾಪಾಸ್ಸು ಪಡೆಯುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದ ಚಲನಚಿತ್ರ ಲೋಕದಲ್ಲಿ “ಸಾಹಸಸಿಂಹ” ಎಂದು ಹೆಸರಾಂತ, ಜನಮನಗಳನ್ನು ಗೆದ್ದ, ಶ್ರೇಷ್ಠ ನಟ, ಪದ್ಮಭೂಷಣ ಪುರಸ್ಕೃತ, ಸಂಸ್ಕೃತಿ ಪ್ರೇಮಿ ಡಾ. ವಿಷ್ಣುವರ್ಧನ್ ಅವರ ಸೇವೆ ಮತ್ತು ಕೊಡುಗೆಗಳನ್ನು ಮರೆಯಲು ಸಾಧ್ಯವಿಲ್ಲ. ಕನ್ನಡ ಮತ್ತು ಕರ್ನಾಟಕದ ಹೆಸರನ್ನು ದೇಶದಾದ್ಯಂತ ಪರಿಚಯಿಸಿದ ಮಹಾನ್ ವ್ಯಕ್ತಿಯಾಗಿದ್ದರು ಎಂದಿದ್ದಾರೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸ್ಮಾರಕ, ಕನ್ನಡಾಭಿಮಾನಿಗಳ ಹೃದಯದಲ್ಲಿ ಭಾವನಾತ್ಮಕ ಪ್ರೇರಣೆಯ ಕೇಂದ್ರವಾಗಿದೆ. ಆದರೆ ಇತ್ತೀಚೆಗೆ, ಸ್ಮಾರಕ ಇರುವ ಜಾಗವನ್ನು ಕೆಲವರು ತಮ್ಮ ಹಕ್ಕು ಭೂಮಿಯೆಂದು ಹೇಳಿಕೊಂಡು ರಾತ್ರೋರಾತ್ರಿ ಧ್ವಂಸ ಮಾಡಿರುವುದು ನಮ್ಮೆಲ್ಲರಿಗೂ ಭಾರೀ ನೋವು ತಂದಿದೆ ಎಂದು ಹೇಳಿದ್ದಾರೆ.
ಡಾ. ವಿಷ್ಣುವರ್ಧನ್ ಸ್ಮಾರಕವನ್ನು ಶಾಶ್ವತವಾಗಿ ಕಾಪಾಡಿ, ಅದನ್ನು ರಾಷ್ಟ್ರೀಯ ಮಟ್ಟದ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಿ, ಕಲೆಯ ಪ್ರದರ್ಶನ ಮತ್ತು ತರಬೇತಿಯ ಕಲಾ ಗ್ರಾಮವಾಗಿ ಹಾಗೂ ಕನ್ನಡ ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸುವಂತೆ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಸದರಿ ಭೂಮಿಯನ್ನು ತಕ್ಷಣವೇ ಭೂಸ್ವಾಧೀನಪಡಿಸಿಕೊಳ್ಳಬೇಕು ಹಾಗು ಭೂ ಮಾಲೀಕರಿಗೆ ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಮತಗಳ್ಳತನಕ್ಕೆ ಸಾಕ್ಷಿ ಇಟ್ಟುಕೊಂಡು ಆಯೋಗಕ್ಕೆ ದೂರು ನೀಡಲಿ: ಬಸವರಾಜ ಬೊಮ್ಮಾಯಿ
ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಸಿಎಂ ಡಿ.ಕೆ.ಶಿವಕುಮಾರ್