ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ.
ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಯಿಂದ ಕರೆ ಬಂದಿದ್ದು, ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ.