ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಬೇಸೂರಿನಲ್ಲಿ ಪ್ರಸ್ತಾಪಿತ ಪರಮಾಣು ಅಣುವಿದ್ಯುತ್ ಸ್ಥಾವರ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಕೈಬಿಡಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ಸ್ಥಳೀಯರ ಹಿತರಕ್ಷಣೆಗಾಗಿ ಸರ್ಕಾರದ ವಿರುದ್ಧ ನಿಲ್ಲಲೂ ತಾವು ಸಿದ್ಧ ಎಂದು ಅವರು ಘೋಷಿಸಿದ್ದಾರೆ.
ಪರಿಸರ ವಿನಾಶದ ಯೋಜನೆಗೆ ಜನವಿರೋಧ
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕುನ ಕೋಳೂರು ಗ್ರಾಮ ಪಂಚಾಯ್ತಿ ಆವರಣದಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಸಂಪತ್ತನ್ನು ನಾಶ ಮಾಡಿ ಪ್ರಕೃತಿ ವಿನಾಶ ಮಾಡುವ ಈ ಮಾರಕ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಶರಾವತಿ ಹಿನ್ನೀರು ಪ್ರದೇಶದಲ್ಲಿ ಈಗಾಗಲೇ ಎರಡು ಬಾರಿ ಸರ್ವಸ್ವವನ್ನೂ ಕಳೆದುಕೊಂಡಿರುವ ಮುಳುಗಡೆ ಸಂತ್ರಸ್ತರ ಮೇಲೆ ಮತ್ತೊಂದು ಹೊರೆ ಹಾಕುವುದು ಸಹ್ಯವಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಮಟ್ಟದಲ್ಲಿ ಮನವಿ ಸಲ್ಲಿಕೆ
ಯೋಜನೆಯನ್ನು ಕೈಬಿಡುವಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ರಾಜ್ಯದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಉದ್ದೇಶಿತ ಅಣು ಸ್ಥಾವರದ ವಿರುದ್ಧ ಈ ಭಾಗದ 9 ಗ್ರಾಮ ಪಂಚಾಯ್ತಿಗಳಲ್ಲಿ ನಿರ್ಣಯ ಕೈಗೊಳ್ಳಲಾಗುತ್ತಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಸಹ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮಲೆನಾಡಿನ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಶಾಸಕರು ಮನವಿ ಮಾಡಿದರು.

ಪರಿಸರ ಸೂಕ್ಷ್ಮ ಪ್ರದೇಶದ ಆತಂಕ
ಬೇಸೂರು ಗ್ರಾಮವು ಲಿಂಗನಮಕ್ಕಿ ಅಣೆಕಟ್ಟಿನ ಸಮೀಪದಲ್ಲಿದ್ದು, ಪರಿಸರ ಸೂಕ್ಷ್ಮ ವಲಯವನ್ನು ಹೊಂದಿದೆ. ಇಲ್ಲಿನ ದಟ್ಟ ಅರಣ್ಯ ಮತ್ತು ಜೀವವೈವಿಧ್ಯವು ಅಣು ಸ್ಥಾವರದಿಂದ ಪೂರ್ಣವಾಗಿ ನಾಶವಾಗುವ ಭೀತಿ ಇದೆ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರು ಯೋಜನೆಯ ವಿರುದ್ಧ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಆತಂಕಕ್ಕೆ ಎಸಿ ಸ್ಪಂದನೆ
ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಮಾತನಾಡಿ, “ಜನಸಾಮಾನ್ಯರಿಗೆ ಮಾರಕವಾಗುವ ಯೋಜನೆಯನ್ನು ಅನುಷ್ಠಾನಗೊಳಿಸಲು ಬಿಡುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನೈಜ ವರದಿಯನ್ನು ನೀಡಲಾಗುವುದು” ಎಂದು ಭರವಸೆ ನೀಡಿದರು. ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎ. ಇಂದೂಧರ ಅವರು, ಯೋಜನೆಯನ್ನು ಕೈಬಿಟ್ಟ ಬಗ್ಗೆ ಅಧಿಕೃತ ಪತ್ರವನ್ನು ನೀಡುವಂತೆ ಒತ್ತಾಯಿಸಿದರು.

ಮೇ 7ಕ್ಕೆ ಬೃಹತ್ ಪ್ರತಿಭಟನೆ
ಸಾಗರ ತಾಲ್ಲೂಕಿನ ಬೇಸೂರು ಬಳಿ ನಿರ್ಮಿಸಲು ಉದ್ದೇಶಿಸಿರುವಂತ ಪರಮಾಣು ವಿದ್ಯುತ್ ಸ್ಥಾವರ ವಿರೋಧಿಸಿ ಮೇ.7ರಂದು ಸಾಗರ ನಗರದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಶಿವಪ್ಪ ನಾಯಕ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಂಗಮಂದಿರದಲ್ಲಿ ಸಭೆ ನಡೆಯಲಿದೆ. ಅಂದು ತಜ್ಞರು ಮತ್ತು ವಿಜ್ಞಾನಿಗಳು ಅಣು ಸ್ಥಾವರದಿಂದ ಮನುಕುಲಕ್ಕಾಗುವ ಅಪಾಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂಬುದಾಗಿ ಹೋರಾಟ ಸಮಿತಿಯ ಅಧ್ಯಕ್ಷರಾದಂತ ಬಿಎ ಇಂದೂಧರ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಾಗರ ತಹಶೀಲ್ದಾರ್ ಪ್ರದೀಪ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಶ್ರೀದೇವಿ ಚಳ್ಳಕೆರೆ, ಕೃಷಿ ಅಧಿಕಾರಿ ರಿಜ್ವಾನ್ ಬೇಸೂರು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಹಾಜರಿದ್ದು, ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ವಿರೋಧಿಸಿ ನಿರ್ಣಯವನ್ನು ವಿಶೇಷ ಗ್ರಾಮ ಸಭೆಯಲ್ಲಿ ಕೈಗೊಳ್ಳಲಾಯಿತು.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…
ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮುಂಬಡ್ತಿ ವಿಳಂಬ: ಪ್ರತಿಭಟನೆಯ ಎಚ್ಚರಿಕೆ ನೀಡಿದ ನೌಕರರ ಸಂಘ








